Saturday, June 6, 2026
Homeಕರಾವಳಿಉಡುಪಿಉಡುಪಿ : ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ; ಹಿಂದೂ ಸಂಘಟನೆಯಿಂದ ದಾಳಿ

ಉಡುಪಿ : ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ; ಹಿಂದೂ ಸಂಘಟನೆಯಿಂದ ದಾಳಿ

- Advertisement -
- Advertisement -

ಉಡುಪಿ : ಅಕ್ರಮವಾಗಿ ಮತಾಂತರ ಮಾಡುತ್ತಿರುವ ಆರೋಪ ಮೇರೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿದ ಘಟನೆ ಕಾರ್ಕಳದ ಕುಕ್ಕುಂದೂರು ಗ್ರಾಮದ ನಕ್ರೆ ಆನಂದಿ ಮೈದಾನ ಎಂಬಲ್ಲಿ ನಡೆದಿದೆ.

ಪ್ರಗತಿ ಸೆಂಟರ್ ಮೇಲೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದು, ಇಲ್ಲಿ ಹಲವಾರು ವರ್ಷಗಳಿಂದ ಮತಾಂತರ ನಡೆಯುತ್ತಿದೆ. ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ ಎಂದು ಆರೋಪಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಮತಾಂತರ ಕೆಲಸದಲ್ಲಿ ನಿರತವಾಗಿರುವ ಪ್ರಗತಿ ಸೆಂಟರ್ ಸಂಪೂರ್ಣ ಅಕ್ರಮವಾಗಿದ್ದು,​ ಯಾವುದೇ ಅನುಮತಿ ಪಡೆಯದೇ ಇದನ್ನು ನಡೆಸಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆರೋಪಿಸಿದ್ದಾರೆ.

ಅಕ್ರಮ ಮತಾಂತರ ಕೇಂದ್ರಕ್ಕೆ ಕಾರ್ಯಕರ್ತರು ನುಗ್ಗಿದ ಕೂಡಲೇ ಪರಿಸ್ಥಿತಿ ಬಿಗಡಾಯಿಸಿದ್ದು, ಕೇಂದ್ರದಲ್ಲಿದ್ದ ಪ್ರಾರ್ಥನಾನಿರತರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಸಂಘರ್ಷಕ್ಕೆ ಕಾರಣವಾಗಿದೆ.

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಉಡುಪಿ ಜಿಲ್ಲೆಯ ಕುಕ್ಕುಂದೂರು ನಕ್ರೆ ಆನಂದಿ ಮೈದಾನದಲ್ಲಿರುವ ಸದರಿ ಕೇಂದ್ರದಲ್ಲಿ ಅನೇಕ ಸಮಯದಿಂದ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಬೆನಡಿಕ್ಟ್ ನೇತೃತ್ವದಲ್ಲಿ ಮತಾಂತರ ಕಾರ್ಯ ನಡೆಯುತ್ತಿದೆ. ಯಾವುದೇ ಅನುಮತಿ ಪಡೆಯದೇ ಅಕ್ರಮವಾಗಿ ಪ್ರಾರ್ಥನಾಲಯ ನಡೆಸುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.

ಆರಂಭದಿಂದಲೂ ಹಿಂದೂ ಜಾಗರಣ ವೇದಿಕೆ ಈ ಬಗ್ಗೆ ಹೋರಾಟ ನಡೆಸುತ್ತಲೇ ಇದೆ. ಸೂಕ್ತ ಮಾಹಿತಿಗಳು ಇದ್ದ ಹಿನ್ನೆಲೆಯಲ್ಲಿ ಈಗ ದಾಳಿ ಮಾಡಿದ್ದೇವೆ. ಪೊಲೀಸರು ಮತಾಂತರ ಕೇಂದ್ರಕ್ಕೆ ಹೋಗಿ ವಿಚಾರಿಸಿದ್ದಾರೆ. ಅದ್ದೂರಿ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಆದರೆ, ಪ್ರಾರ್ಥನೆಯ ಹೆಸರಿನಲ್ಲಿ ಮತಾಂತರಕ್ಕೆ ಅವಕಾಶ ಇದೆ. ಮತಾಂತರಿಗಳಿಗೆ ಕೊವಿಡ್ ನಿಯಮ ಪಾಲನೆ ಇಲ್ಲವೇ? ಕರಾವಳಿ ಜಿಲ್ಲೆಗಳಲ್ಲಿ ಹಲವಾರು ಮತಾಂತರ ಕೇಂದ್ರಗಳಿವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ. ಪರಿಸ್ಥಿತಿ ಹದಗೆಡಲು ಅವಕಾಶ ಕೊಡಬೇಡಿ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ ಇದೇ ವೇಳೆ ಆಕ್ರೋಶ ಹೊರಹಾಕಿದ್ದಾರೆ.

- Advertisement -

Latest News

error: Content is protected !!