ಮಂಗಳೂರು : ಅಕ್ಷರ ಸಂತ ಎಂಬ ಬಿರುದಿನಿಂದ ನಾಮಾಂಕಿತಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಅಭಿಮಾನದ ಹರೇಕಳ ಹಾಜಬ್ಬರನ್ನು 2020ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ.
ಹಳ್ಳಿಯ ಬಡ ವ್ಯಕ್ತಿಯೊಬ್ಬರು ಮಂಗಳೂರು ವಿಶ್ವವಿದ್ಯಾನಿಲಯ, ಹಂಪಿ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಕೇರಳದ ಕನ್ನಡ ಶಾಲೆಯ ಪಠ್ಯದ ವಿಷಯದ ಎತ್ತರಕ್ಕೆ ಬೆಳೆದು, ಅಕ್ಷರ ಸಂತನಾಗಿ ಗುರುತಿಸಿಕೊಂಡಿದ್ದಾರೆ. ಬಡ ಮಕ್ಕಳ ಶಿಕ್ಷಣಕ್ಕೆ ಪೂರಕ ಸರಕಾರಿ ಪದವಿ ಪೂರ್ವ ಕಾಲೇಜು, ಐಟಿಐ ಆರಂಭಿಸುವ ಕನಸು ಕಾಣುತ್ತಿದ್ದಾರೆ. ಅದಕ್ಕಾಗಿ ದಣಿಯದೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅನಾರೋಗ್ಯ, ವೈಯಕ್ತಿಕ ಸಮಸ್ಯೆಗಳ ನಡುವೆಯೂ ಮಕ್ಕಳಿಗೆ ಶಿಕ್ಷಣ ಕೊಡುವ ಅವರ ಉತ್ಸಾಹ ಬತ್ತಿಲ್ಲ.
![](https://mahaxpress.com/wp-content/uploads/2021/10/WhatsApp-Image-2021-10-21-at-12.09.01-PM-1.jpeg)
ಈ ಹಿಂದೆ 2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿತ್ತು. ಮಾರ್ಚ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನವಾಗದೇಕಿತ್ತು. ಆದರೆ, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಬ ಮುಂದೂಡಲ್ಪಟ್ಟಿತ್ತು. ಇದೀಗ ನವಂಬರ್ ತಿಂಗಳಲ್ಲಿ ಪ್ರಶಸ್ತಿ ಪ್ರಧಾನಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.
ನವದೆಹಲಿಗೆ ಆಗಮಿಸುವಂತೆ ಹರೇಕಳ ಹಾಜಬ್ಬಗೆ ಪತ್ರ ಬಂದಿದೆ. ಈ ಹಿನ್ನೆಲೆಯಲ್ಲಿ ತನ್ನ ಸಹಾಯಕ ಜೊತೆ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನವಂಬರ್ 8ರಂದು ದೆಹಲಿಗೆ ತಲುಪಿ ಅಲ್ಲಿನ ಅಶೋಕ್ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.