ಬೆಂಗಳೂರು: ನಾಳೆಯಿಂದ (ಜೂನ 27)ರಿಂದ ರಾಜ್ಯಾದ್ಯಂತ ಪೂರಕ ಪರೀಕ್ಷೆ ನಡೆಯಲಿದೆ. ಜುಲೈ 4 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸಹಿತ ಒಟ್ಟಾರೆ 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ 343 ಸಾಮಾನ್ಯ ಮತ್ತು 80 ಖಾಸಗಿ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳ ಸುರಕ್ಷೆ ದೃಷ್ಟಿಯಿಂದ ಮುಖ್ಯ ಪರೀಕ್ಷೆಗೆ ಅಳವಡಿಸಿಕೊಂಡಿದ್ದ ಮಾರ್ಗಸೂಚಿ ಯನ್ನೇ ಪೂರಕ ಪರೀಕ್ಷೆಗೂ ಅಳವಡಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ.
ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಜು.11ರಿಂದ ರಾಜ್ಯಾದ್ಯಂತ 5 ಜಿಲ್ಲೆಗಳ 28 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಆಗಸ್ಟ್ ಮೊದಲನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಮಂಡಳಿ ಗುರಿ ಹೊಂದಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.