ಮಂಗಳೂರು: ಕೊಡಗು ಹಾಗೂ ದ.ಕ. ಜಿಲ್ಲೆಯಲ್ಲಿ ಮಳೆ ಹಾನಿ ಹಾಗೂ ಲಘು ಭೂಕಂಪನಕ್ಕೊಳಗಾದ ಪ್ರದೇಶಗಳಿಗೆ ಇಂದು ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಅವರಿಗೆ ಇಂಧನ ಸಚಿವ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಸಾಥ್ ನೀಡಲಿದ್ದಾರೆ.
ಎರಡು ಜಿಲ್ಲೆಗಳಿಗೆ ಭೇಟಿ ನೀಡಲಿರುವ ಸಚಿವರು ಸ್ಥಳೀಯರಿಂದ ಮಾಹಿತಿ ಪಡೆಯಲಿದ್ದಾರೆ. ಭೂಕುಸಿತ ಮತ್ತು ಮಳೆ ಹಾನಿ ಬಗ್ಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲಿದ್ದಾರೆ. ಬೆಳಿಗ್ಗೆ 10.30 ಕ್ಕೆ ಸಂಪಾಜೆ -ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 11.15ಕ್ಕೆ ಪದೇ ಪದೇ ಭೂಕಂಪನ ಉಂಟಾದ ಚೆಂಬು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಮಳೆ ಹಾನಿ, ಭೂಕುಸಿತ ವೀಕ್ಷಣೆ, ಗ್ರಾಮಸ್ಥರ ಸಮಸ್ಯೆಯನ್ನು ಸಚಿವರು ಆಲಿಸಲಿದ್ದಾರೆ.
ನಂತರ ಭೂಕಂಪ ಮಾಪನ ಅಳವಡಿಸಿರುವ ಶಾಲೆಗೆ ಭೇಟಿ ನೀಡಲಿದ್ದಾರೆ. ಭೂಕಂಪದ ಬಗ್ಗೆ ಪರಿಶೀಲನೆ ನಡೆಸಲು ಬಂದಿರುವ ತಜ್ಞರೊಂದಿಗೆ ಸಚಿವರು ಚರ್ಚೆ ನಡೆಸಲಿದ್ದು, ಮಧ್ಯಾಹ್ನ 1 ಗಂಟೆಗೆ ಆರಂತೋಡು ಭೂಕಂಪನ ಪ್ರದೇಶಕ್ಕೆ ಭೇಟಿ ನೀಡಿ, ಸಂಜೆ 4 ಗಂಟೆಗೆ ಉಳ್ಳಾಲ, ಬಟ್ಟಂಪಾಡಿ ಕಡಲ ಕೊರೆತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 4.30ಕ್ಕೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ.