Thursday, September 10, 2026
Homeಕರಾವಳಿದ. ಕ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ರಜೆ ಕಡ್ಡಾಯ ಪಾಲನೆಗೆ ಜಿಲ್ಲಾಧಿಕಾರಿ...

ದ. ಕ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ರಜೆ ಕಡ್ಡಾಯ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ; ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ ಎಚ್ಚರಿಕೆ

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಪ್ರಸ್ತುತ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿಯವರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ.


ಪ್ರಾಕೃತಿಕ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಶುಕ್ರವಾರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆಯನ್ನು ಮೊದಲು ಸಮೀಕ್ಷೆ ಮಾಡಬೇಕು. ಅವರು ಹಳ್ಳಿ, ಹಾಸ್ಟೆಲ್‌ನಿಂದ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು. ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು, ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಭಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ. ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.


ಮಂಗಳೂರು ಮಹಾ ನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್ಟಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!