Saturday, June 13, 2026
HomeUncategorized18 ವರ್ಷದೊಳಗಿನ ಭಿಕ್ಷಾಟನೆಯಲ್ಲಿ ತೊಡಗಿರುವ 720 ಮಕ್ಕಳ ರಕ್ಷಣೆಗೆ ಸರ್ಕಾರದ ಚಿಂತನೆ

18 ವರ್ಷದೊಳಗಿನ ಭಿಕ್ಷಾಟನೆಯಲ್ಲಿ ತೊಡಗಿರುವ 720 ಮಕ್ಕಳ ರಕ್ಷಣೆಗೆ ಸರ್ಕಾರದ ಚಿಂತನೆ

- Advertisement -
- Advertisement -

ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿರುವ 18 ವರ್ಷದೊಳಗಿನ 720 ಬಾಲಾಪರಾಧಿಗಳನ್ನು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರವು ಗುರುತಿಸಿದ್ದು, ಅವರನ್ನು ಶೀಘ್ರದಲ್ಲೇ ರಕ್ಷಿಸಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಗೃಹ ಮಂತ್ರಿ ಆರಗ ಜ್ಞಾನೇಂದ್ರ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಶ್ರೀನಿವಾಸ ಪೂಜಾರಿ ಅವರು, “ಭಿಕ್ಷಾಟನೆಯಂತಹ ಸೋಗಿನಲ್ಲಿ ಹಲವಾರು ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು ಸರ್ಕಾರಕ್ಕೆ ತಿಳಿದಿದೆ. ನಗರದಲ್ಲಿ 50-70 ಸ್ಥಳಗಳಲ್ಲಿ ಭಿಕ್ಷಾಟನೆ ವ್ಯಾಪಕವಾಗಿದ್ದು, ಮಕ್ಕಳ ರಕ್ಷಣಾ ನಿರ್ದೇಶನಾಲಯವು 101 ಮಕ್ಕಳನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸಿದೆ” ಎಂದು ಹೇಳಿದರು.

ಇನ್ನು ನಗರದಲ್ಲಿ ಭಿಕ್ಷಾಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಎಂಟು ಪೊಲೀಸ್ ವಿಭಾಗಗಳಲ್ಲೂ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಮತ್ತು ಕ್ರಿಯಾ ಯೋಜನೆ ಜಾರಿಯಲ್ಲಿದೆ. ಭಿಕ್ಷಾಟನೆಗೆ ಮಕ್ಕಳನ್ನು ಬಳಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ತಿಳಿಸಿದರು.

ಬೀದಿ ಬದಿಯಲ್ಲಿ ಭಿಕ್ಷಾಟನೆ ಮಾಡುವ ಮಕ್ಕಳನ್ನು ಪತ್ತೆ ಹಚ್ಚಲು, ಮಕ್ಕಳ ಕಲ್ಯಾಣ ನಿರ್ದೇಶನಾಲಯವು ‘ಇ-ಗುರುತು’ ಎಂಬ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ. ಈ ಅಪ್ಲಿಕೇಶನ್ ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್ಲೋಡ್ ಮಾಡಬಹುದಾಗಿದೆ. ಇನ್ನು ಮಕ್ಕಳನ್ನು ನಿಷೇಧಿತ ವಸ್ತುಗಳನ್ನು ಸೇವಿಸಲು ಒತ್ತಾಯಿಸಿ, ಭಿಕ್ಷಾಟನೆಗಾಗಿ ಬೀದಿಗೆ ತಳ್ಳಲಾಗುತ್ತಿದೆ. ಹಾಗಾಗಿ ಬೀದಿಗಳಲ್ಲಿ ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- Advertisement -

Latest News

error: Content is protected !!