ಮಂಗಳೂರು, ಮೇ 29: ರಾಜ್ಯದಲ್ಲಿ ಜವಾಬ್ದಾರಿಯುತ ವಿಪಕ್ಷವಾಗಿ ಕಾಂಗ್ರೆಸ್ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದ್ದರೆ, ಬಿಜೆಪಿಯ ಶಾಸಕರು ಅಧಿಕಾರ, ಮಂತ್ರಿಗಿರಿಯ ಕಚ್ಚಾಟದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಡಳಿತಾರೂಢ ಬಿಜೆಪಿ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯ ಸಂದರ್ಭ ಗಂಭೀರ ಆರೋಪ ಮಾಡಿದ್ದಾರೆ.
ಕೋವಿಡ್ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿ ಯಾವುದೇ ರಾಜಕೀಯ ಮಾಡದೇ , ವಿಪಕ್ಷವಾಗಿ ಕಾಂಗ್ರೆಸ್ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಪಕ್ಷದ ಮುಖಂಡರು ಸರಕಾರಕ್ಕೆ ಸಾಕಷ್ಟು ಸಲಹೆ ಸೂಚನೆಗಳನ್ನು ನೀಡಿದ್ದರೂ ಸರಕಾರ ಮಾತ್ರ ಅದನ್ನು ಒಪ್ಪಿಲ್ಲ. ಆರೋಗ್ಯ, ಶಿಕ್ಷಣ ಸಚಿವರ ನಡುವೆ ಕಚ್ಚಾಟ, ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪವಿದೆ. ಈ ಬಗ್ಗೆ ತನಿಖೆಗೆ ಅವಕಾಶ ನೀಡುವಂತೆ ಸರಕಾರವನ್ನು ಕೇಳಿಕೊಂಡರೂ ಅದಕ್ಕೆ ನಿರಾಕರಿಸುವ ಮೂಲಕ ತಪ್ಪನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಲೀಂ ಅಹ್ಮದ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್, ಮಾಜಿ ಶಾಸಕರಾದ ಮೊಯ್ದಿನ್ ಬಾವ, ಜೆ.ಆರ್. ಲೋಬೋ, ಮುಖಂಡರಾದ ಜಿ.ಎ.ಬಾವಾ, ಶಶಿಧರ ಹೆಗ್ಡೆ, ಮಂಜುನಾಥ ಭಂಡಾರಿ, ಬಿ.ಇಬ್ರಾಹೀಂ, ಟಿ.ಎಂ.ಶಹೀದ್, ದಿನೇಶ್ ಆಳ್ವ, ಶುಭೋದಯ, ಬಲರಾಜ್ ಮೊದಲಾದವರು ಉಪಸ್ಥಿತರಿದ್ದರು.
ಕಾಂಗ್ರೆಸ್ ಕೊರೊನ ವಿರುದ್ಧ ಹೋರಾಡುತ್ತಿದ್ದರೆ, ಬಿಜೆಪಿ ಅಧಿಕಾರಕ್ಕಾಗಿ ಹೋರಾಡುತ್ತಿದೆ : ಸಲೀಂ ಅಹ್ಮದ್
- Advertisement -
- Advertisement -
- Advertisement -