Saturday, June 13, 2026
Homeತಾಜಾ ಸುದ್ದಿರಸ್ತೆ ಬದಿ ಕಟ್ಟಡ ನಿರ್ಮಾಣಕ್ಕೆ ನಿಯಮ ಜಾರಿ: ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಪ್ರಕಟಣೆ.

ರಸ್ತೆ ಬದಿ ಕಟ್ಟಡ ನಿರ್ಮಾಣಕ್ಕೆ ನಿಯಮ ಜಾರಿ: ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಪ್ರಕಟಣೆ.

- Advertisement -
- Advertisement -

ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಸಿ.ಸಿ. ಪಾಟೀಲ್, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ಸಹಾಯಕವಾಗಿ, ವಾಹನ ಸಂಚಾರ ಸುಗಮವಾಗುವುದಲ್ಲದೇ, ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ.

ಅಲ್ಲದೇ ಸಿಟಿ ಕಾರ್ಪೊರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಷಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ಈ ಅಂತರವನ್ನು ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕನಿಷ್ಠ 6 ಮೀಟರ್ ಅನ್ನು ಕಾಯ್ದುಕೊಳ್ಳಬೇಕು ಹಾಗೂ ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿ.ಮೀ. ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರುಗಳನ್ನು ಹೆದ್ದಾರಿ ಪ್ರಾಧಿಕಾರಿ ಎಂದು ಘೋಷಿಸಲಾಗಿದ್ದು, ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು ಹಾಗೂ ರಸ್ತೆ ಗಡಿಯನ್ನು ನಿಗದಿಪಡಿಸುವುದು ಅವರ ಜವಾಬ್ಧಾರಿಯಾಗಿರುತ್ತದೆ ಎಂದು ಸಿ.ಸಿ. ಪಾಟೀಲ್ ವಿವರಿಸಿದ್ದಾರೆ.

- Advertisement -

Latest News

error: Content is protected !!