ಮಂಗಳೂರು: ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ ಅವರು ಇಂದು ತವರಿಗೆ ಆಗಮಿಸಿದ್ದಾರೆ.

ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಗುರುರಾಜ್ ಪೂಜಾರಿಯವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಭಾರತದ ಕೀರ್ತಿ ಪತಾಕೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ಗುರುರಾಜ್ ಪೂಜಾರಿಯವರನ್ನು ಸಂಸದ ನಳಿನ್ ಕುಮಾರ್ ಕಟೀಲು, ಸಂಸದ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಆತ್ಮೀಯವಾಗಿ ಅಭಿನಂದಿಸಿ ಶುಭ ಕೋರಿದರು.

ಕಾಮನ್ ವೆಲ್ತ್ ಗೇಮ್ಸ್-2022ರಲ್ಲಿ ಭಾರತೀಯ ವೇಟ್ ಲಿಫ್ಟರ್ಗಳ ತಂಡ ಪಾಲ್ಗೊಂಡಿದ್ದು, ಗುರುರಾಜ್ ಕಂಚು ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ್ ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪಾಲ್ಗೊಂಡಿದ್ದು, ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ ಗುರುರಾಜ್ ಒಟ್ಟು 249 ಕೆಜಿ(111+138) ಭಾರ ಎತ್ತಿ ಬೆಳ್ಳಿಯ ಪದಕ ಗೆದ್ದಿದ್ದಲ್ಲದೆ, ತನ್ನ ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಸಮಗಟ್ಟಿದರು. ಈ ಬಾರಿ 61 ಕೆಜಿ ವಿಭಾಗದಲ್ಲಿ ಗುರುರಾಜ್ ಸ್ಪರ್ಧಿಸಿದ್ದು, ಕಂಚಿನ ಪದಕ ಒಲಿಸಿಕೊಳ್ಳುವ ಮೂಲಕ ಎರಡನೇ ಬಾರಿ ದೇಶಕ್ಕಾಗಿ ಪದಕ ತಂದಿದ್ದಾರೆ.


