ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹೈಟೆಕ್ ಆಸ್ಪತ್ರೆಗಳ ಕೊರತೆ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ಕಲಾಪದಲ್ಲಿ ಮಂಗಳೂರು ಶಾಸಕ ಮತ್ತು ವಿಪಕ್ಷ ಉಪನಾಯಕ ಯು.ಟಿ ಖಾದರ್ ಪ್ರಶ್ನೆಗೆ ಕಾರ್ಮಿಕ ಸಚಿವರು ಈ ಉತ್ತರ ನೀಡಿದ್ದಾರೆ. ಮಂಗಳೂರು, ಉಡುಪಿ ಭಾಗದಲ್ಲಿ ಇಎಸ್ ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವ ಕಾರಣ ಹೊಸತಾಗಿ ಕರಾವಳಿ ಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಕ್ಕೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿ ಎಂದು ಖಾದರ್ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದರು.
ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ಹೈಟೆಕ್ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿ ಕೊಂಡಿದ್ದೇವೆ, ಕಾರ್ಮಿಕರಿಗೆ ಯಾವುದೇ ತೊಂದರೆ ಆಗುತ್ತಿಲ್ಲ, ಬೇಕಾದ ಎಲ್ಲಾ ಸವಲತ್ತು ಸಿಗುತ್ತಿದೆ, ಚಿಕಿತ್ಸೆಗೆ ಹಣ ಬಿಡುಗಡೆಯಲ್ಲಿ ಯಾವುದೇ ವಿಳಂಬ ಮಾಡಿಲ್ಲ ಎಂದು ಉತ್ತರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಹೊರತಾಗಿ ಇಎಸ್ ಐ ಆಸ್ಪತ್ರೆ ಸಮರ್ಪಕವಾಗಿಲ್ಲ, ಹಾಗಾಗಿ ಡಾಕ್ಟರ್ ಮತ್ತು ಸಿಬ್ಬಂದಿ ನೇಮಕ ಮಾಡಿ ಎಂದು ಖಾದರ್ ಸರ್ಕಾರವನ್ನು ಸದನದಲ್ಲಿ ಆಗ್ರಹಿಸಿದರು.
ಈ ವೇಳೆ ಬಂಟ್ವಾಳ, ಗಂಜಿಮಠ, ಮೂಡಬಿದಿರೆ, ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ಇಎಸ್ಐ ಚಿಕಿತ್ಸಾಲಯಕ್ಕೆ ಅನುಮೋದನೆ ಸಿಕ್ಕಿದ್ದು, ಶೀಘ್ರ ಕಾರ್ಯಾರಂಭಕ್ಕೆ ಕ್ರಮ ವಹಿಸುವುದಾಗಿ ಕಾರ್ಮಿಕ ಸಚಿವರು ಸದನದಲ್ಲಿ ಭರವಸೆ ನೀಡಿದ್ದಾರೆ.