ಹಾವೇರಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿ ತಲುಪಿದ್ದ ತಾಲ್ಲೂಕಿನ ಹಳ್ಳೂರು ಗ್ರಾಮದ ಕವನ ಹಿರೇಮಠ (21) ಕುಟುಂಬಸ್ಥರು ಆಕೆಯ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾರೆ.

ಹಳ್ಳೂರ ಗ್ರಾಮದ ಕವನ ಹಿರೇಮಠ ಶಿಕಾರಿಪುರದ ಗಾರ್ಮೆಂಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರ ಗ್ರಾಮದ ಬಳಿ ಓಮಿನಿ- ಚಕ್ಕಡಿ ಗಾಡಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರವಾಗಿ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾ ಸ್ಥಿತಿಗೆ ತಲುಪಿದ್ದರು.
ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗಳಂತೂ ಇನ್ನು ಬದುಕಲ್ಲ, ಅವಳ ಅಂಗಾಂಗವಾದರೂ ಇತರರಿಗೆ ಬದುಕು ನೀಡಲಿ ಎಂದು ನಿರ್ಧರಿಸಿದ ಆಕೆಯ ಕುಟುಂಬಸ್ಥರು ವೈದ್ಯರೊಂದಿಗೆ ಚರ್ಚಿಸಿದರು.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೃತಳ ಕುಟುಂಬಸ್ಥರು ಕಿಡ್ನಿ, ಹೃದಯ, ಲಿವರ್, ಕಣ್ಣು, ಚರ್ಮ ದಾನ ಮಾಡಿದರು. ತಕ್ಷಣವೇ ಅಂಗಾಂಗಗಳನ್ನು ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇದರಿಂದ ನಾಲ್ವರ ಪ್ರಾಣ ಉಳಿದಂತಾಗಿದೆ. ಬಾಳಿ ಬೆಳಗಬೇಕಿದ್ದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರು ನೋವಿನ ನಡುವೆಯೂ ಸಾರ್ಥಕತೆ ಮೆರೆದಿದ್ದಾರೆ.


