ಕೊಡಗು : ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಮೂಲತಃ ಬಾಳೆಲೆ ಗ್ರಾಮದ ನಿವಾಸಿ ತರುಣ್ ಕುಮಾರ್(23) ಶವವಾಗಿ ಪತ್ತೆಯಾಗಿದ್ದಾರೆ.
ಮಾಕುಟ್ಟ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಡುವ ವಿ.ಬಾಡಗ ಭಾಗದಲ್ಲಿ ಸೆ.23ರ ಸಂಜೆ ವೇಳೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ತರುಣ್ ನಾಪತ್ತೆಯಾಗಿದ್ದರು. ಕಳೆದ ನಾಲ್ಕು ದಿನಗಳಿಂದ ಪತ್ತೆ ಕಾರ್ಯ ನಡೆಸಲಾಗಿದ್ದು, ಇಂದು ಬೆಳಗ್ಗೆ ವಿ.ಬಾಡಗದ ಕೊಕ್ಕೆಹೊಳೆಯ ನೀರು ಗುಂಡಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ.
ಮಂಗಳೂರಿನಿಂದ ಆಗಮಿಸಿದ್ದ ಈಜು ತಜ್ಞರು ಹಾಗೂ ಎನ್.ಡಿ.ಆರ್.ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಅರಣ್ಯ ಇಲಾಖೆ, ಅಗ್ನಿ ಶಾಮಕದಳ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಹಕರಿಸಿದರು.
ವಿ.ಬಾಡಗದಲ್ಲಿರುವ ಅರಣ್ಯ ಇಲಾಖೆಯ ಶಿಬಿರದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತರುಣ್ ಕುಮಾರ್ ಗೆ ಅಂತಿಮ ನಮನ ಸಲ್ಲಿಸಿದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪೋಷಕರಿಗೆ ಹಸ್ತಾಂತರಿಸಲಾಯಿತು. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ ಹೇಳಿದರು.