ಬೆಂಗಳೂರು: ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದು ತಾಯಿ ಹಾಗೂ ಮಗು ದಾರುಣವಾಗಿ ಮೃತಪಟ್ಟ ಆಘಾತಕಾರಿ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತಪಟ್ಟವರನ್ನು ಗೋಪಾಲನ್ ಕಾಲನಿಯ ನಿವಾಸಿಗಳಾದ ಸೌಂದರ್ಯ(23) ಮತ್ತು ಅವರ ಪುತ್ರಿ ಸುವಿಕ್ಷ ಲಿಯ(9 ತಿಂಗಳು) ಎಂದು ಗುರುತಿಸಲಾಗಿದೆ. ಇನ್ನು ಪತಿಯ ಜೊತೆ ತಮಿಳುನಾಡಿಗೆ ತೆರಳಿದ್ದ ಸೌಂದರ್ಯ ಮತ್ತು ಅವರ ಪುತ್ರಿ ಲೀಲಾ ಇಂದು ಬೆಳಗ್ಗೆ 6 ಗಂಟೆಗೆ ಬಸ್ಸಿನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದರು. ಬಳಿಕ ತಾಯಿ-ಮಗಳು ಫುಟ್ ಪಾತ್ನಲ್ಲಿ ನಡೆದುಕೊಂಡು ಮನೆಯತ್ತ ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ಯ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆದು ಅವರನ್ನು ಬಂಧಿಸಲಾಗಿತ್ತು. ಆದರೆ ಸೋಮವಾರ ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕರು ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಲಕ್ಷ್ಯ ತೋರಿದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಘಟನೆಯ ಆರೋಪದ ಮೇರೆಗೆ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶ್ರೀರಾಮ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುಬ್ರಹ್ಮಣ್ಯ, ಸಹಾಯಕ ಎಂಜಿನಿಯರ್ ಚೇತನ್, ಜಂಟಿ ಎಂಜಿನಿಯ ರಾಜಣ್ಣ ಮತ್ತು ಸ್ಟೇಷನ್ ಆಪರೇಟರ್ ಮಂಜುನಾಥ್ ಅವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.