ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾಸಭಾವು ಬ್ಯಾರಿ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.
ಮಹಾಸಭಾದ ಅಧ್ಯಕ್ಷ ಅಬ್ದುಲ್ ಅಜೀಜ್ ಬೈಕಂಪಾಡಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ವಿವಿಧ ಕಡೆ ಹಾಗೂ ಹೊರರಾಜ್ಯಗಳಲ್ಲಿ ಬ್ಯಾರಿ ಸಮುದಾಯಕ್ಕೆ ಸೇರಿದ 25 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿ ಸಂಖ್ಯೆಯಲ್ಲಿ ನೆಲೆಸಿರುವ ಬ್ಯಾರಿಗಳಲ್ಲಿ ಹೆಚ್ಚಿನವರು ವ್ಯಾಪಾರ ವೃತ್ತಿಯಲ್ಲಿ ತೊಡಗಿದ್ದಾರೆ. ನಮ್ಮ ಸಮುದಾಯದಲ್ಲಿ ಕಡು ಬಡವರು ಗಣನೀಯ ಪ್ರಮಾಣದಲ್ಲಿದ್ದಾರೆ. ಧಾರ್ಮಿಕ ಕಾರಣಗಳಿಂದಾಗಿ ಶಿಕ್ಷಣ ವಂಚಿತರಾದವರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕಾಗಿದೆ. ಬ್ಯಾರಿಗಳ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪಿಸಿ, ವರ್ಷಕ್ಕೆ 3200 ಕೋಟಿ ಅನುದಾನ ಒದಗಿಸಬೇಕು’ ಎಂದು ಒತ್ತಾಯಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಬಜೆಟ್ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಕೆ 3 ಸಾವಿರ ಕೋಟಿ ಅನುದಾನದಲ್ಲೇ 3 200 ಕೋಟಿಯನ್ನು ಬ್ಯಾರಿ ನಿಗಮಕ್ಕೆ ನೀಡಿ ಎಂಬುದು ನಮ್ಮ ಒತ್ತಾಯ’ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಸಂಚಾಲಕ ಮೊಹಮ್ಮದ್ ಶಾಕೀರ್, ಸದಸ್ಯರಾದ ಅಶ್ರಫ್ ಬದ್ರಿಯಾ, ಅಬ್ದುಲ್ ಜಲೀಲ್ ಕೃಷ್ಣಾಪುರ, ಇ.ಕೆ.ಹುಸೈನ್, ಮೊಹಮ್ಮದ್ ಹನೀಫ್ ಯು., ಅಬ್ದುಲ್ ಲತೀಫ್ ಬ್ಲೂಸ್ಟಾರ್, ಅಬ್ದುಲ್ ಖಾದರ್ ಇಷ್ಮಾ, ಹಮೀದ್ ಕಿನ್ಯಾ, ಬಾವ ಪದರಂಗಿ, ಮೊಹಮ್ಮದ್ ಸಾಲಿ ಭಾಗವಹಿಸಿದ್ದರು.