ಕೇರಳದ ನೆಯಪ್ರಿಂಕರ ಬಳಿಯ ಪೂವರ್ನಲ್ಲಿ ತಾತ್ಕಾಲಿಕ ಸೇತುವೆಯನ್ನು ಕ್ರಿಸ್ಮಸ್ ಆಚರಣೆಯ ಅಂಗವಾಗಿ ನಿರ್ಮಿಸಲಾಗಿದ್ದು, ಇದೀಗ ಸೇತುವೆಯು ಕುಸಿದು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ತಿರುವನಂತಪುರಂನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇನ್ನು ಕ್ರಿಸ್ಮಸ್ ಆಚರಣೆಯ ಭಾಗವಾಗಿ ನಿರ್ಮಿಸಿದ ತಾತ್ಕಾಲಿಕ ಸೇತುವೆ ಕುಸಿತದ ಪರಿಣಾಮದಿಂದ 7 ರಿಂದ 8 ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯು ಸೋಮವಾರ ರಾತ್ರಿ 9 ಗಂಟೆಗೆ ನಡೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇತುವೆಯ ಮೇಲೆ ನಿಂತಿದ್ದರು. ಏಕಾಏಕಿ ಸೇತುವೆ ಕುಸಿದ ಕಾರಣ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ತಂಡ ತೆರಳಿ ಆಂಬುಲೆನ್ಸ್ ವ್ಯವಸ್ಥೆ ಮಾಡುವ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಕ್ರಿಸ್ಮಸ್ ಆಚರಣೆಯ ಭಾಗವಾಗಿ ಯೇಸುವಿನ ವಿವಿಧ ಕಲಾಕೃತಿಗಳು, ವಿಭಿನ್ನ ಬಗೆಯ ಮೂರ್ತಿಗಳು, ಅಲಂಕಾರಿಕ ಪ್ರದರ್ಶನ ಏರ್ಪಡಿಸಲಾಗಿತ್ತು. ಒಂದು ಭಾಗದಿಂದ ಇನ್ನೊಂದು ಕಡೆಗೆ ತೆರಳಲು ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಲಾಗಿತ್ತು.