ಉಡುಪಿ: ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿ ಬಾಲಕೃಷ್ಣ (44) ಎಂದು ತಿಳಿದು ಬಂದಿದೆ.

ಬಾಲಕೃಷ್ಣ ಅವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರಿಗೆ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೆ ಅಕ್ಟೋಬರ್ 20 ರಂದು ಬಾಲಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದರು. ಬಾಲಕೃಷ್ಣ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಮೃತರ ಸಹೋದರ ರಾಮಕೃಷ್ಣ ಎಂಬವರು ಅಜೆಕಾರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು. ತಾನು ಮತ್ತು ಪ್ರಿಯಕರ ಊಟದಲ್ಲಿ ವಿಷ ಬೆರೆಸಿ ನೀಡಿದ್ದಾಗಿ ತನ್ನ ಸಹೋದರ ಸಂದೀಪ್ ಜೊತೆ ಪ್ರತಿಮಾ ಬಾಯಿ ಬಿಟ್ಟಿದ್ದು, ಸದ್ಯಕ್ಕೆ ಮೃತರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಅಜೆಕಾರು ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.


