ಹುಬ್ಬಳ್ಳಿ; ಇತ್ತೀಚೆಗೆ ಅಮೆರಿಕದ ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸುಮಾರು 70 ವರ್ಷದ ವೃದ್ಧೆ ಮೇಲೆ ಮುಂಬೈಯ ಎಸ್.ಮಿಶ್ರಾ ಎಂಬಾತ ಮೂತ್ರ ವಿಸರ್ಜನೆ ಮಾಡಿದ್ದು ವಿಶ್ವದಾದ್ಯಂತ ಸುದ್ದಿಯಾಗಿತ್ತು. ಇದೀಗ ರಾಜ್ಯದಲ್ಲಿ ಅಂತಹದ್ದೊಂದು ಘಟನೆ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಯುವಕನೊಬ್ಬ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ,
ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಹುಬ್ಬಳ್ಳಿ ಎಸಿ ಸ್ಲೀಪರ್ ಬಸ್ ಅನ್ನು ಹುಬ್ಬಳ್ಳಿ ಸಮೀಪದ ಕಿರೇಸೂರು ಢಾಬಾದಲ್ಲಿ ನಿಲುಗಡೆ ಮಾಡಲಾಗಿತ್ತು. ಆಗ ಯುವತಿ ಸೀಟ್ನ ಬಳಿ ಬಂದ ಸುಮಾರು 32 ವರ್ಷ ವಯಸ್ಸಿನ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಚಲಿತಗೊಂಡ ಯುವತಿ ಕಿರುಚಿದ್ದಾರೆ. ಇದನ್ನು ಕೇಳಿದ ಸಹ ಪ್ರಹಯಾಣಿಕರು, ಬಸ್ ಸಿಬ್ಬಂದಿ ಅತ್ತ ಧಾವಿಸಿ ಯುವಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಆತನನ್ನು ಅಲ್ಲಿಯೇ ಕೆಳಗಳಿಸಿ ಪ್ರಯಾಣ ಮುಂದುವರಿಸಲಾಗಿದೆ ಎನ್ನಲಾಗಿದೆ. ಯುವತಿಯು ಪೊಲೀಸರಿಗೆ ದೂರು ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಪ್ರಯಾಣವನ್ನು ಮುಂದುವರಿಸಿದೆವು ಎಂದು ಕೆಎಸ್ಆರ್ಟಿಸಿ ಸಿಬ್ಬಂದಿ ತಿಳಿಸಿದ್ದಾರೆ.
ಇನ್ನು ಯುವತಿ ಸೀಟ್ ನಂಬರ್ 3 ರಲ್ಲಿ ಕುಳಿತಿದ್ದಳು. ಯುವಕ 28-29 ಸೀಟ್ ನಲ್ಲಿದ್ದ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿರುವುದಾಗಿಯೂ, ತಾನು ಮೆಕ್ಯಾನಿಕಲ್ ಎಂಜಿನಿಯರ್ ಎಂದು ತಿಳಿಸಿರುವುದಾಗಿಯೂ ಸಹ ಪ್ರಯಾಣಿಕರು ಹೇಳಿದ್ದಾರೆ. ಈ ವಿಚಾರ ಇನ್ನಷ್ಟೇ ದೃಢಪಡಬೇಕಿದೆ. ಯುವಕ ಮದ್ಯಪಾನದ ಅಮಲಿನಲ್ಲಿದ್ದ ಎಂದೂ ಕೆಲವು ಮೂಲಗಳು ಹೇಳಿವೆ. ಘಟನೆ ನಡೆದ ಕೂಡಲೇ ಬ್ಯಾಗ್ ಮತ್ತು ಆಸನವನ್ನು ಶುಚಿಗೊಳಿಸಿದ ಸಿಬ್ಬಂದಿ, ಘಟನೆಯಿಂದಾಗಿ ಆಘಾತಗೊಂಡಿದ್ದ ಯುವತಿಗೆ ಸುರಕ್ಷತೆ ಒದಗಿಸುವ ಭರವಸೆ ನೀಡಿದರು.