
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶೆರೆವಾಡ ಗ್ರಾಮದ ಸಮೀಪ ಬುಧವಾರ ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಲಿಸುವ ಬಸ್ನ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ, ಯುವಕನ ರುಂಡ ತುಂಡಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತನನ್ನು ಶಿರೂರು ಗ್ರಾಮದ ಪಕ್ಕಿರಯ್ಯ ಚನ್ನಯ್ಯ ಮುತ್ತಳ್ಳಿಮಠ (18) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ಈತ, ಲಕ್ಷ್ಮೇಶ್ವರ ಕಡೆಗೆ ತೆರಳುತ್ತಿದ್ದ ಬಸ್ನ ಹಿಂಬದಿ ಆಸನದಲ್ಲಿ ಕುಳಿತು ಪ್ರಯಾಣಿಸುವಾಗ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದ ಎನ್ನಲಾಗಿದೆ. ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಬಸ್ನ ತೀರಾ ಸಮೀಪವಾಗಿ ಹಾದುಹೋಗುವಾಗ ಯುವಕನ ತಲೆಗೆ ಬಲವಾಗಿ ಢಿಕ್ಕಿಯಾಗಿದೆ.
ಅಪಘಾತದ ತಕ್ಷಣ ಬಸ್ ಚಾಲಕ ವಾಹನವನ್ನು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಕುಂದಗೋಳ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


