ಬಂಟ್ವಾಳ : ಮಹಾತ್ಮಾ ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾಗಬೇಕಾದರೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಟ್ಟಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಅಬ್ದುಲ್ ನಝೀರ್ ಸಾಬ್ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು ಇದರ ನಿರ್ದೇಶಕಿ ಶ್ರೀಮತಿ ಗಾಯತ್ರಿ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮ ಪಂಚಾಯತ್ ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಯವರ ಜೊತೆಗಿನ ನೇರ ಸಂವಾದದಲ್ಲಿ ಮಾತನಾಡಿದರು.
ಕಛೇರಿಯ ಕಡತಗಳನ್ನು ಪರಿಶೀಲಿಸಿ, ಕೋವಿಡ್ ನಿರ್ವಹಣೆ, ಸಾಮಾನ್ಯ ಸಭೆ, ಗ್ರಾಮ ಸಭೆ, ವಾರ್ಡ್ ಸಭೆ ಮತ್ತು ಪಂಚಾಯತ್ ನ ಆಂತರಿಕ ಮತ್ತು ಬಾಹ್ಯ ವಿಚಾರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟು ಪಂಚಾಯತ್ ಮುತುವರ್ಜಿ ವಹಿಸಬೇಕು ಎಂದು ಹೇಳಿ ಮಾಣಿ ಗ್ರಾಮ ಪಂಚಾಯತ್ ನ ಕಾರ್ಯವೈಖರಿ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರು, ಮಾನ್ಯ ನಿರ್ದೇಶಕರಿಗೆ ಪಂಚಾಯತ್ ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಯಾವ ರೀತಿ ತೊಡಗಿಕೊಂಡಿದೆ ಎನ್ನುವ ಬಗ್ಗೆ ಸವಿವರವಾಗಿ ಹೇಳಿದರು.
ದ.ಕ.ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಶ್ರೀ ಕೆ.ಆನಂದ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಜಣ್ಣ, ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ಸೀತಾ, ಸುಜಾತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಉಪಸ್ಥಿತರಿದ್ದರು.ಬಳಿಕ ಮಾನ್ಯ ನಿರ್ದೇಶಕಿ ಶ್ರೀಮತಿ ಗಾಯತ್ರಿಯವರು ಗ್ರಂಥಾಲಯಕ್ಕೆ ಭೇಟಿ ನೀಡಿದರು.