ಮಂಗಳೂರು: ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡು ಒದ್ದಾಡುತ್ತಿದ್ದ ಸ್ಥಿತಿಯಲ್ಲೂ ಪಾಪಿಗಳು ಅವರ ಪರ್ಸ್ ಕದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ, ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೋವಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಚಾಲಕ ಕೊಕ್ಕರಕಲ್ ನಿವಾಸಿ ರೋಹನ್ ಹಾಗೂ ಪ್ರಯಾಣಿಕ ಅಂಗರಗುಡ್ಡೆ ನಿವಾಸಿ ರಮೇಶ್ ದೇವಾಡಿಗ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಬಳಿಕ ಸ್ವಲ್ಪ ಹೊತ್ತಿನಲ್ಲಿ ಕಾರಿನಲ್ಲಿದ್ದ ಪರ್ಸ್ ಹಾಗೂ ಎಟಿಎಂ ಕಾರ್ಡ್ ಅನ್ನು ಯಾರೋ ಕಳ್ಳತನ ಮಾಡಿದ್ದಾರೆ ಎಂದು ಕಾರಿನ ಮಾಲೀಕ ರಮಾನಾಥ ಪೈ ದೂರಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಎರಡು ವಾಹನಗಳನ್ನು ತೆರವುಗೊಳಿಸಿದ್ದಾರೆ