ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಹತ್ತಿರದ ಸಂಪರ್ಕವಾದ ದಿಡುಪೆ- ಎಳನೀರು ರಸ್ತೆ ನಿರ್ಮಾಣಕ್ಕೆ ಮುಂದಿನ ಒಂದು ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಹೇಳಿದರು.
ಅವರು ಶನಿವಾರ ಮಲವಂತಿಗೆಯ ಕಜಕ್ಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ರಸ್ತೆ ಅಭಿವೃದ್ಧಿ ಬಗ್ಗೆ ಈಗಾಗಲೇ ಶಾಸಕ ಹರೀಶ್ ಪೂಂಜ ಅವರೊಡನೆ ಮಾತುಕತೆ ನಡೆಸಿದ್ದು ರಾಜ್ಯಮಟ್ಟದಿಂದ ಅನುಮತಿ ದೊರೆಯಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಜತೆ ಶೀಘ್ರ ಚರ್ಚೆ ನಡೆಸಿ ರಸ್ತೆ ನಿರ್ಮಾಣದ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಎಳನೀರು ಹಾಗೂ ಮಲವಂತಿಗೆ ಗ್ರಾಮದ ಹಲವರು ಸ್ವ-ಇಚ್ಛೆಯಿಂದ ತಮ್ಮ ಜಾಗವನ್ನು ಸರಕಾರಕ್ಕೆ ಬಿಟ್ಟು ಕೊಡುವ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳು 5 ವರ್ಷದಿಂದ ನೆನೆಗುದಿಗೆ ಬಿದ್ದಿವೆ ಎಂದು ಗ್ರಾಮಸ್ಥರು ಹೇಳಿದರು. ಈ ಬಗ್ಗೆ ಕೂಡಲೇ ದಾಖಲೆಗಳನ್ನು ಪರಿಶೀಲಿಸಿ, ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲು ವನ್ಯಜೀವಿ ವಿಭಾಗಕ್ಕೆ ಡಿಸಿ ಆದೇಶಿಸಿದರು.
ಮಲವಂತಿಗೆ ಗ್ರಾಮದಲ್ಲಿ ಹಲವಾರು ಜಲಪಾತ ಜನಾಕರ್ಷಕ ಪ್ರೇಕ್ಷಣೀಯ ಸ್ಥಳಗಳಿದ್ದು ರಾಜ್ಯದ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಇದರ ಎಲ್ಲಾ ಆದಾಯ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಕ್ಕೆ ಸೇರುತ್ತಿದ್ದು ಪಂಚಾಯಿತಿಗೆ ಯಾವುದೇ ಆದಾಯ ಬರುತ್ತಿಲ್ಲ ಎಂಬ ವಿಚಾರ ಡಿಸಿ ಅವರ ಗಮನಕ್ಕೆ ತರಲಾಯಿತು.
ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಸೇರಿ ಸಮಿತಿಯೊಂದನ್ನು ರಚಿಸಿ ಇಲ್ಲಿನ ಪ್ರೇಕ್ಷಣೀಯ ಸ್ಥಳಗಳಿಂದ ಬರುವ ಆದಾಯವನ್ನು ವನ್ಯಜೀವಿ ವಿಭಾಗ ಮತ್ತು ಪಂಚಾಯಿತಿ 50:50 ಹಂಚಿಕೊಳ್ಳಬೇಕು ಎಂದು ತಿಳಿಸಿದರು.
2019ರ ನೆರೆ ಹಾನಿ ಪರಿಹಾರ ಪಡೆಯಲು ಬಾಕಿ ಇರುವವರಿಗೆ ಕೂಡಲೇ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಪುತ್ತೂರು ಎಸಿ ಗಿರೀಶ್ ನಂದನ್ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.