ಮಂಗಳೂರು: ಸಮಯಕ್ಕೆ ಸರಿಯಾಗಿ ಕೋವಿಡ್ ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನವನ್ನು ನೀಡಬೇಕು,ಒಂದು ವೇಳೆ ತಡವಾಗಿ ವೇತನ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿದ್ದು, ಅದರ ನಿರ್ವಹಣೆ, ನಿಯಂತ್ರಣ ಹಾಗೂ ಶುಶ್ರೂಷೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಕಾಲಕಾಲಕ್ಕೆ ವೇತನ ಪಾವತಿಸುವುದು ಸಂಬಂಧಿಸಿದ ಅಧಿಕಾರಿಗಳ ಕರ್ತವ್ಯ. ಈ ಹಿನ್ನೆಲೆಯಲ್ಲಿ ಪ್ರಯೋಗಾಲಯ ತಂತ್ರಜ್ಞರು, ಸ್ಟಾಫ್ ನರ್ಸ್ಗಳು ಹಾಗೂ ಊಟ ಉಪಾಹಾರ ಒದಗಿಸುವ ಕ್ಯಾಂಟೀನ್ಗಳಿಗೆ ಕಾಲಕಾಲಕ್ಕೆ ವೇತನ ಪಾವತಿಸಬೇಕು. ಇದರಲ್ಲಿ ವಿಳಂಬ ತೋರುವ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ಅವರನ್ನು ಅಮಾನತು ಮಾಡಬೇಕು ಸಚಿವರು ಸೂಚಿಸಿದರು.
ಸರ್ಕಾರದಿಂದ ಕೋವಿಡ್ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲಾಗುತ್ತಿದ್ದು,ಸಮಸ್ಯೆಗಳಿದ್ದಲ್ಲಿ ಇತ್ಯರ್ಥಪಡಿಸಿಕೊಂಡು ಕ್ರಮವಹಿಸಲು ತಿಳಿಸಲಾಗಿದೆ. ಆದರೂ ಅಧಿಕಾರಿಗಳ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕೋವಿಡ್ ತಪಾಸಣೆಯನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯವಿರುವ ಕ್ರಮ ಹಾಗೂ ಬೇಕಾದ ಸಿಬ್ಬಂದಿ ನೇಮಿಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ‘ಇದಕ್ಕೆ ಸಂಬಂಧಿಸಿ ಈ ತಿಂಗಳ ಅಂತ್ಯದೊಳಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲ ತಹಶೀಲ್ದಾರರು ತಿಂಗಳ 5ನೇ ತಾರೀಕಿನೊಳಗೆ ಸಂಬಂಧಿಸಿದ ಸಿಬ್ಬಂದಿಗೆ ವೇತನ ಪಾವತಿಸಬೇಕು, ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಇಲ್ಲದಿದ್ದರೇ ಸಂಬಂಧಿಸಿದ ತಹಶೀಲ್ದಾರರಿಗೆ ನೋಟೀಸ್ ನೀಡಿ, ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಎಚ್ಚರಿಸಿದರು.