
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.
ತುರ್ತು ಸಂದರ್ಭಗಳಲ್ಲಿ ತಮಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಅನುಮತಿ ನೀಡಬೇಕೆಂದು ಹಾಗೂ ಈ ಹಿಂದೆ ಕೋರ್ಟ್ ನೀಡಿದ್ದ ಆದೇಶದಲ್ಲಿ ಮಾರ್ಪಾಡು ಮಾಡಬೇಕೆಂದು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ರಿಜಿಸ್ಟ್ರಾರ್ ವಿಚಾರಣೆಗೆ ಪಟ್ಟಿ ಮಾಡುವ ಹಂತದಲ್ಲೇ ತಿರಸ್ಕರಿಸಿದ್ದಾರೆ.
ಈ ಅರ್ಜಿ ವಿಚಾರಣೆಗೆ ಅರ್ಹವಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದ ಸುಪ್ರೀಂ ಕೋರ್ಟ್, ಒಂದು ವರ್ಷದೊಳಗೆ ಪ್ರಮುಖ ಸಾಕ್ಷಿಗಳ ವಿಚಾರಣೆಯಲ್ಲಿ ಗಣನೀಯ ಪ್ರಗತಿ ಕಾಣದಿದ್ದರೆ ಮಾತ್ರ ದರ್ಶನ್ ಮತ್ತೆ ಜಾಮೀನು ಕೋರಬಹುದು ಎಂದು ಈ ಹಿಂದೆ ತಿಳಿಸಿತ್ತು. ಇದರ ಬೆನ್ನಲ್ಲೇ ದರ್ಶನ್ ನಡೆಸಿದ ಈ ಹೊಸ ಪ್ರಯತ್ನ ಪೂರ್ಣ ಪ್ರಮಾಣದ ವಿಚಾರಣೆಯ ಹಂತ ತಲುಪುವ ಮೊದಲೇ ವಿಫಲಗೊಂಡಿದೆ.


