ಬೆಂಗಳೂರು: ಮೊನ್ನೆಯಷ್ಟೇ ಸಂಸದೆ ಸುಮಲತಾ ಅಂಬರೀಶ್ ಅವರು ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ತಿಳಿಸಿದ್ದರು. ಇದೀಗ ಅವರ ಬೆನ್ನಲ್ಲೇ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಕ್ ಲೈನ್ ಅವರಿಗೆ ಆರೋಗ್ಯ ಸಮಸ್ಯೆಗಳೇನೂ ಇಲ್ಲದೇ ಇದ್ದರೂ, ಕೊರೊನಾ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ರಾಕ್ಲೈನ್ ವೆಂಕಟೇಶ್ ಅವರು ಸಂಸದೆ, ನಟಿ ಸುಮಲತಾ ಅವರ ಸಂಪರ್ಕದಲ್ಲಿದ್ದರು. ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಕ್ಲೈನ್ ವೆಂಕಟೇಶ್ ಕ್ವಾರಂಟೈನ್ಗೆ ಒಳಗಾಗಿದ್ದರು.
ಆದರೆ ಈಗ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಕ್ಲೈನ್ ವೆಂಕಟೇಶ್ ಅವರ ಪುತ್ರ ವೈದ್ಯರಾಗಿದ್ದು, ತಂದೆಯವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ರಾಕ್ಲೈನ್ ವೆಂಕಟೇಶ್ ಅವರು ಸುಮಲತಾ ಅವರೊಂದಿಗೆ ಜೂನ್ 29 ರಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಂಬರೀಶ್ ಸ್ಮಾರಕದ ಬಗ್ಗೆ ಚರ್ಚೆ ನಡೆಸಿದ್ದರು. ಸುಮಲತಾ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವ ಕಾರಣ ರಾಕ್ಲೈನ್ ವೆಂಕಟೇಶ್ಗೆ ಆತಂಕ ಎದುರಾಗಿದೆ.
ಇನ್ನು ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ರಾಕ್ಲೈನ್ ವೆಂಕಟೇಶ್ ಅವರು ರಾಜ್ಕುಮಾರ್ ರಸ್ತೆಯಲ್ಲಿರುವ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಕ್ಲೈನ್ ವೆಂಕಟೇಶ್ ಅವರ ಪುತ್ರ ಅಭಿಲಾಶ್ ಅವರೇ ರಾಕ್ಲೈನ್ ಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.
ಹಾಗೇ ಹಿರಿಯ ನಟ ದೊಡ್ಡಣ್ಣ ಅವರಿಗೂ ಕೊರೊನಾ ಆತಂಕ ಎದುರಾಗಿದೆ. ಸುಮಲತಾ ಅವರೊಂದಿಗೆ ಜೂನ್ 29 ರಂದು ನಟ ದೊಡ್ಡಣ್ಣ, ಪುತ್ರ ಅಭಿಶೇಕ್ ಸಹ ಸಿಎಂ ಭೇಟಿಗೆ ಹೋಗಿದ್ದರು. ಅಷ್ಟೇ ಅಲ್ಲದೆ ಸುಮಲತಾ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಕೆಲವು ಶಾಸಕರು, ಅಧಿಕಾರಿಗಳು ಸಹ ಭಾಗವಹಿಸಿದ್ದರು. ಎಲ್ಲರಿಗೂ ಈಗ ಆತಂಕ ಎದುರಾಗಿದೆ.