ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಇತ್ತೀಚೆಗೆ ಷರತ್ತುಬದ್ಧ ಜಾಮೀನು ಪಡೆದ ಬೆನ್ನಲ್ಲೇ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಜನವರಿ 12 ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡುವಾಗ, ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯದ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮಾನವ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಕೆ. ಅವರು ಈ ಕುರಿತು ಪೋಲೀಸರಿಗೆ ದೂರು ನೀಡಿದ್ದಾರೆ. ‘ಪ್ರಭಾಕರ ಭಟ್ ಅವರು ಸಮಾಜದಲ್ಲಿ ದ್ವೇಷ ಬಿತ್ತಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ನ್ಯಾಯಾಲಯವು ದ್ವೇಷ ಭಾಷಣ ಮಾಡದಂತೆ ಅವರಿಗೆ ಷರತ್ತು ವಿಧಿಸಿದ್ದರೂ, ಅದರ ಉಲ್ಲಂಘನೆ ಮಾಡಿ ಮತ್ತೆ ಹಿಂಸೆಯನ್ನು ಪ್ರೇರೇಪಿಸುವ ಕೆಲಸ ಮಾಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (BNS) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇವಲ ಪ್ರಭಾಕರ ಭಟ್ ಮಾತ್ರವಲ್ಲದೆ, ಈ ಭಾಷಣವನ್ನು ನೇರ ಪ್ರಸಾರ ಮಾಡಿ ಸಾರ್ವಜನಿಕವಾಗಿ ಹರಡಲು ಕಾರಣವಾದ ‘ವಿಕಸನ ಟಿವಿ’ (VIKASANA TV) ಎಂಬ ಯೂಟ್ಯೂಬ್ ಚಾನಲ್ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ.
ಹಿಂದಿನ ಪ್ರಕರಣಗಳಲ್ಲಿ ಜಾಮೀನು ಪಡೆಯುವಾಗ ‘ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ’ ಎಂಬ ಷರತ್ತಿಗೆ ಕಲ್ಲಡ್ಕ ಪ್ರಭಾಕರ ಭಟ್ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದರೆ ಈಗ ಮತ್ತೆ ಪುನಃ ಅದೇ ರೀತಿಯ ಪ್ರಚೋದನಾಕಾರಿ ಭಾಷಣ ಮಾಡಿರುವುದು ಅವರಿಗೆ ಮತ್ತೊಂದು ಕಾನೂನು ತೊಡಕು ಉಂಟು ಮಾಡಲಿದೆ.


