ಸುಳ್ಯ; ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಿತು.
ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಚುನಾವಣೆ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಹಳ ಮುಖ್ಯವಾಗಿದ್ದು ಎಷ್ಟೇ ಭಿನ್ನಾಭಿಪ್ರಾಯ, ಅಸಮಾಧಾನ ಇದ್ದರೂ ಅದನ್ನು ಬದಿಗಿರಿಸಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಈ ಬಾರಿ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನ ಸುಳ್ಯದಲ್ಲಿ ಗೆಲ್ಲಿಸಿ ಎಂದು ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಕರಾವಳಿಯಲ್ಲಿ ಬಿಜೆಪಿ ಅಭಿವೃದ್ಧಿಗೆ ಒತ್ತು ನೀಡಿಲ್ಲ ಬದಲಾಗಿ, ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡಿ ರಾಜಕೀಯ ಲಾಭ ಪಡೆಯುವುದು ಬಿಜೆಪಿ ಕೆಲಸ ಎಂದು ಹೇಳಿದರು.ಮುಂದೆ ಕಾಂಗ್ರೆಸ್ ಸರ್ಕಾರ ಬಂದಲ್ಲಿ ಜಿಲ್ಲೆಯಲ್ಲಿ ಬಡವರಿಗಾಗಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತೇವೆ. ಕಾಂಗ್ರೆಸ್ ಈ ಬಾರಿ ನೀಡಿರುವ ಗ್ಯಾರಂಟಿ ಕಾರ್ಡ್ ಪಕ್ಷ ನೀಡುವ ಪಕ್ಕಾ ಗ್ಯಾರಂಟಿ ಎಂದ ಅವರು 200 ಯೂನಿಟ್ ವಿದ್ಯುತ್ ನೀಡುವ ಗೃಹ ಜ್ಯೋತಿ, ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆ, ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವ ಗೃಹ ಲಕ್ಷ್ಮಿ ಯೋಜನೆ, ಯುವಕರಿಗೆ ಪಿಂಚಣಿ ನೀಡುವ ಯುವ ನಿಧಿ ಯೋಜನೆ ಅನುಷ್ಠಾನ ಮಾಡಿಯೇ ಮಾಡ್ತೇವೆ. ಯಾರೇ ಮುಖ್ಯಮಂತ್ರಿ ಆದರೂ ಕೊಟ್ಟ ವಚನವನ್ನು ಪಾಲಿಸುತ್ತೇವೆ ಎಂದರು.
ಯುವಕರಿಗೆ ಬಿಜೆಪಿ ಸರ್ಕಾರ ಉದ್ಯೋಗ ಕೊಡುವ ಭರವಸೆ ನೀಡಿತ್ತು, ಆದ್ರೆ ಇಲ್ಲಿವರೆಗೂ ಈಡೇರಿಲ್ಲ, ರಾಜ್ಯದಲ್ಲಿ 2.5 ಲಕ್ಷ ಉದ್ಯೋಗ, ಕೇಂದ್ರದಲ್ಲಿ 30 ಲಕ್ಷ ಉದ್ಯೋಗ ಖಾಲಿ ಇದೆ ಎಂದು ಹೇಳಿದರು. ಆದ್ರೆ ಕಾಂಗ್ರೆಸ್ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದರು. ದೇಶದ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಖರ್ಗೆ ಕರೆ ನೀಡಿದರು.