ಬೆಂಗಳೂರು: ಕರ್ನಾಟಕ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸ್ವೀಕೃತವಾಗಿರುವ ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿವೆ.
ಭಾರತೀಯ ಜನತಾ ಪಕ್ಷದ ಮೂವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇಬ್ಬರು ಹಾಗೂ ಜಾತ್ಯತೀತ ಜನತಾದಳದ ಓರ್ವ ಅಭ್ಯರ್ಥಿ ನಾಮಪತ್ರಗಳೂ ಒಳಗೊಂಡಂತೆ ಎಲ್ಲಾ ಆರು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ ಅಂಗೀಕೃತವಾಗಿವೆ ಎಂದು ಚುನಾವಣಾಧಿಕಾರಿಗಳೂ ಆದ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಗಳಾದ ವಿಧಾನಸಭೆ ಕಾರ್ಯದರ್ಶಿಗಳ ಕಚೇರಿಯಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಿತು.
ನಾಮಪತ್ರ ಪರಿಶೀಲನೆ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳಾದ ಜೈರಾಂ ರಮೇಶ್, ಮನ್ಸೂರ್ ಖಾನ್, ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ದಿ ಮತ್ತು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಸಿರೋಯಾ ಹಾಜರಿದ್ದರು.
ಇನ್ನು ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್ ಮತ್ತು ಜಗ್ಗೇಶ್ ನಾಮಪತ್ರಗಳ ಪರಿಶೀಲನೆ ವೇಳೆ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.
ಜೂನ್ ಹತ್ತರಂದು ಚುನಾವಣೆ ನಡೆಯಲಿದ್ದು, ನಾಮಪತ್ರಗಳನ್ನು ವಾಪಸ್ ಪಡೆಯಲು ಜೂನ್ 3 ಕೊನೆಯ ದಿನವಾಗಿದೆ.


