ಉಳ್ಳಾಲ: ನಿರ್ಮಾಣ ಹಂತದಲ್ಲಿದ್ದ ಮನೆಯೊಂದರ ಮೇಲಂತಸ್ತಿನ ಗೋಡೆಗೆ ಪೈಂಟ್ ಬಳಿಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಕಾರ್ಮಿಕನೊಬ್ಬ ಕೆಳಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಂಜನಾಡಿ ಗ್ರಾಮದ ಕಟ್ಟೆಮಾರ್ ನಿವಾಸಿ ಝುಲ್ಫಿಕಾರ್ ಆಲಿ (29) ಎಂದು ಗುರುತಿಸಲಾಗಿದೆ. ಕೊಲ್ಯದ ಮಳಯಾಳ ಚಾಮುಂಡಿ ದೈವಸ್ಥಾನದ ಬಳಿಯ ಅಡ್ಕಬೈಲ್ನಲ್ಲಿ ಬಾಳೆಹಣ್ಣು ವ್ಯಾಪಾರಿ ಗಣೇಶ್ ಅವರ ನಿರ್ಮಾಣ ಹಂತದ ಮನೆಯ ಪೈಂಟಿಂಗ್ ವೇಳೆ ಈ ಘಟನೆ ಸಂಭವಿಸಿದೆ. ಮನೆಯ ಬದಿಯಲ್ಲೇ ಹೈಟೆನ್ಷನ್ ತಂತಿ ಹಾದು ಹೋಗಿದ್ದು ಈ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮಾರ್ಬಲ್ ಮತ್ತು ಪೈಂಟಿಂಗ್ ಕಾರ್ಮಿಕರು ಮನೆಯಲ್ಲಿ ಕೆಲಸ ಮಾಡುತ್ತಿದ್ದು, ಝುಲ್ಪಿಕಾರ್ ಅವರು ಮೇಲಂತಸ್ತಿನ ಮನೆಗೆ ರೋಲರ್ನಿಂದ ಪೈಂಟಿಂಗ್ ಮಾಡುತ್ತಿದ್ದಾಗ ದಿಢೀರನೆ ಕೆಳಗೆ ಎಸೆಯಲ್ಪಟ್ಟು ಕಲ್ಲಿನ ಗೋಡೆ ಮೇಲೆ ಬಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತತ್ಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯದಲ್ಲಿಯೇ ಸಾವನ್ನಪಿದ್ದಾರೆ.
ವಿದ್ಯುತ್ ಟ್ರಾನ್ಸ್ಫಾರ್ಮರ್ ಮನೆಯ ಪಕ್ಕದಲ್ಲೇ ಇದ್ದು, ನಿಯಮಗಳನ್ನು ಗಾಳಿಗೆ ತೂರಿ ಮನೆ ನಿರ್ಮಾಣ ಮಾಡಿದ ಆರೋಪ ಗಣೇಶ್ ಅವರ ವಿರುದ್ದ ಇದೀಗ ಕೇಳಿ ಬಂದಿದೆ ಎನ್ನಲಾಗಿದೆ. ಸೆಟ್ಬ್ಯಾಕ್ ಬಿಡದೆ ಮನೆ ನಿರ್ಮಿಸಿರುವುದು ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.