ನವದೆಹಲಿ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಸಿಂಗಂ ಖ್ಯಾತಿಯ ಅಣ್ಣಾಮಲೈ ಇಂದು ಅಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುವುದರೊಂದಿಗೆ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ ತಮ್ಮ ಜೀವನದ 2ನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
ನವದೆಹಲಿಯಲ್ಲಿ ಬಿಜೆಪಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಸೇರಿದಂತೆ ಕೆಲವು ಗಣ್ಯರ ಸಮ್ಮುಖದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವುದರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ಕಳೆದ ಒಂದು ವರ್ಷದಿಂದ ಅಣ್ಣಾಮಲೈ ರಾಜಕೀಯಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳಿಗೆ ತೆರೆಬಿದ್ದಿದ್ದು, ತಮ್ಮ ತವರು ರಾಜ್ಯವಾದ ತಮಿಳುನಾಡಿನಲ್ಲಿ ಪಕ್ಷದ ಸಂಘಟನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಮುಂದಿನ ವರ್ಷದ 2021ರ ಮಧ್ಯಭಾಗದಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿಯ ಪ್ರಮುಖ ತಾರಾ ಪ್ರಚಾರಕರಾಗಿ ಪಕ್ಷವನ್ನು ಅಣ್ಣಾಮಲೈ ಮುನ್ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ದ್ರಾವಿಡರ ನಾಡಿನಲ್ಲಿ ಬಿಜೆಪಿಗೆ ಹೇಳಿಕೊಳ್ಳುವಂತಹ ನಾಯಕರಿಲ್ಲ. ಕಳೆದ ಒಂದು ವರ್ಷದಿಂದಲೇ ಆರ್ಎಸ್ಎಸ್ ಸ್ಥಳೀಯ ನಾಯಕರನ್ನು ಒಗ್ಗೂಡಿಸಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವ ಹೊಣೆಗಾರಿಕೆಯನ್ನು ಈಗಾಗಲೇ ಅವರು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.