ಬಳ್ಳಾರಿ: ಉತ್ತರ ಪ್ರದೇಶದ ಹಾಥರಸ್ನಲ್ಲಿ ಯುವತಿಯೊಬ್ಬಳ ಮೇಲೆ ನಡೆದಿದೆ ಎನ್ನಲಾದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿರುವ ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಡಿವೈಎಸ್ಪಿ ಹಾಗೂ ಭಾರತೀಯ ಜನಶಕ್ತಿ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಅನುಪಮಾ ಶೆಣೈ ಆಗ್ರಹ ವ್ಯಕ್ತಪಡಿಸಿದ್ದಾರೆ.
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಪರಾಧಿಗೆ ಶಿಕ್ಷೆ ಆಗದಿದ್ರೂ ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು ಎಂಬ ಉದ್ದೇಶವನ್ನು ಹೊಂದಿದ್ದು, ಇದರಿಂದಾಗಿಯೇ ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅಭಿಪ್ರಾಯಪಟ್ಟರು.
ಹಾಥರಸ್ ಪ್ರಕರಣವನ್ನು ರಾಜಕೀಯಗೊಳಿಸದೆ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ಅತ್ಯಾಚಾರಕ್ಕೊಳಗಾದ ಮಹಿಳೆಯ ಶವವನ್ನು ಕುಟುಂಬಕ್ಕೆ ನೀಡದೆ ಪೊಲೀಸರೇ ಸುಟ್ಟು ಹಾಕಿದ್ದು ತಪ್ಪು. ಸಾಕ್ಷ್ಯನಾಶ ಮಾಡಿದ ಪೊಲೀಸರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಥರಸ್ ಪ್ರಕರಣದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡದೆ ನ್ಯಾಯಯುತ ತನಿಖೆಗೆ ಅವಕಾಶ ನೀಡಬೇಕೆಂದು ಅನುಪಮಾ ಒತ್ತಾಯಿಸಿದರು.


