ಬೆಳ್ತಂಗಡಿ: ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಉದಯ್ ಕುಮಾರ್ ಲಾಯಿಲ ಇವರ ಸಾಧನೆಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಲಭಿಸಿದೆ. ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಕಲಾ ನಿರ್ದೇಶಕರಾಗಿ, ಸಂಘಟಕರಾಗಿ, ಕಲಾವಿದರಾಗಿ ಮಾತ್ರವಲ್ಲದೆ ರಾಜ್ಯ ಮಟ್ಟದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸಿರುವ ಇವರ ಪ್ರತಿಭೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಈ ಮೂಲಕ ಬೆಳ್ತಂಗಡಿ ತಾಲೂಕಿನ ಹಿರಿಮೆ ಹೆಚ್ಚಾಗಿದೆ.
ಇವರು ಮೂಲ ಜಾನಪದ ಕಲೆಯ ವಿವಿಧ ಪ್ರಕಾರಗಳನ್ನು ತಾಲೂಕು ಹಾಗೂ ಜಿಲ್ಲೆಗೆ ಪರಿಚಯಿಸಿದವರು. ಹಾಡು, ನೃತ್ಯ, ಜನಪದ ಕಮ್ಮಟ, ಬೀದಿನಾಟಕ, ಜನಜಾಗೃತಿ ಕಾರ್ಯಕ್ರಮ, ಮಕ್ಕಳ ಬೇಸಿಗೆ ಶಿಬಿರದ ಆಯೋಜನೆ, ತುಳುನಾಡ ವೈಭವ ಕಾರ್ಯಕ್ರಮ ಮೊದಲಾದವುಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕೃತ ಜನಪದ ಕಲಾವಿದರಾಗಿರುವ ಇವರು ದ.ಕ ಜಿಲ್ಲಾ ಕನ್ನಡ ಜಾನಪದ ಪರಿಷತ್ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.
ರಾಷ್ಟ್ರೀಯ ಸಂಸ್ಕೃತಿ ವಿನಿಮಯ ಕಾರ್ಯಕ್ರಮಗಳನ್ನು ಹೊರ ರಾಜ್ಯಗಳಲ್ಲಿ ಹಮ್ಮಿಕೊಂಡ ಹೆಮ್ಮೆ ಇವರದ್ದು. ಆಕಾಶವಾಣಿ, ಚಂದನ, ದೂರದರ್ಶನ ಕಾರ್ಯಕ್ರಮಗಳನ್ನು ನೀಡಿರುವ ಇವರಿಗೆ ಮೈಸೂರು ಕಲಾ ಸೌರಭ ಗೌರವ ಪ್ರಶಸ್ತಿಯೊಂದಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಿಸಲ್ಪಟ್ಟಿದ್ದಾರೆ.ಮೇ 25 ರಂದು ಬೆಂಗಳೂರಿನ ರವೀಂದ್ರ ಕಲಾ ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.