ಬೆಂಗಳೂರು : ಕೊರೋನಾ ವಾರಿಯರಿಯರ್ಸ್ ಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ, ಮುಷ್ಕರಕ್ಕೆ ಮುಂದಾಗಿದ್ದಾರೆ. ತಮಗೆ ನೀಡುವ ವೇತನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಜುಲೈ 10ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಹೋರಾಡುತ್ತಿರುವ ನಮಗೆ ಚಪ್ಪಾಳೆ, ಹೂ ಮಳೆಗಳ ಗೌರವ ಸಾಕು, ಗೌರವಯುತ ಬದುಕು ನಡೆಸಲು ಗೌರವ ಧನ ಬೇಕು ಎಂದಿದ್ದಾರೆ. ಕೊರೋನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ, ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ತಿಳಿಸಿದ್ದಾರೆ.
42 ಸಾವಿರ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಜುಲೈ 10 ರಿಂದ ಆಶಾ ಕಾರ್ಯಕರ್ತೆಯರ ಸೇವೆ ಸ್ಥಗಿತವಾಗಲಿದೆ. ಮಾಸಿಕ ಗೌರವ ಧನವನ್ನು 12 ಸಾವಿರ ರೂಪಾಯಿಗೆ ಹೆಚ್ಚಳ ಸೇರಿದಂತೆ ಅಗತ್ಯ ಸೌಲಭ್ಯಕ್ಕೆ ಆಗ್ರಹಿಸಿ ಮುಷ್ಕರ ನಡೆಸಲಿದ್ದಾರೆ. ಜನವರಿಯಿಂದ ಸರ್ಕಾರಕ್ಕೆ 10 ಮನವಿ ಪತ್ರ ನೀಡಿದರೂ ಸರ್ಕಾರ ಸ್ಪಂದಿಸಿಲ್ಲ. ಇದೀಗ ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಅಶಾ ಕಾರ್ಯಕರ್ತೆಯರ ಪ್ರತಿಭಟನೆಯ ಕಾವು ತಟ್ಟುತ್ತಿದೆ. ಮನೆ ಮನೆಗೆ ತೆರಳಿ ಸಮೀಕ್ಷೆ, ಸೋಂಕು ಪತ್ತೆ ಹಚ್ಚುವಲ್ಲಿ ಇವರ ಪಾತ್ರ ಅತಿ ಮುಖ್ಯವಾಗಿದೆ. ಇದೀಗ ಇವರೆಲ್ಲರೂ ಮುಷ್ಕರ ನಡೆಸಲು ಮುಂದಾಗಿದ್ದು, ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದೆ