ಬೆಂಗಳೂರು: ವಿಧಾನ ಮಂಡಲದ ಮಳೆಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 13ರಿಂದ 24 ರವರೆಗೆ ಒಟ್ಟು ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ ನಿಗದಿ ಪಡಿಸಲಾಗಿದೆ.
ಒಟ್ಟು ಹತ್ತು ದಿನಗಳ ಕಾಲ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪಗಳು ನಡೆಯಲಿವೆ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರಿಗೆ ಮೊದಲ ಅಧಿವೇಶನ ಇದಾಗಲಿದೆ. ಅಲ್ಲದೇ ಐವರು ಸಚಿವರಿಗೆ ಇದು ಮೊದಲ ಅಧಿವೇಶನವಾಗಲಿದೆ.
ಈ ಹಿಂದೆಯೇ ಮುಂಗಾರು ಅಧಿವೇಶನ ನಡೆಯಬೇಕಿತ್ತಾದರೂ ಕೊರೋನಾ ಎರಡನೇ ಅಲೆಯ ಕಾರಣದಿಂದಾಗಿ ದಿನಾಂಕ ನಿಗದಿ ಮಾಡುವುದು ಮುಂದೂಡಲ್ಪಡುತ್ತಲೇ ಬರುತ್ತಿತ್ತು.
ಇಂದು ದಿನಾಂಕ ನಿಗದಿ ಮಾಡಿರುವುದನ್ನು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.