ಮಂಗಳೂರು: ಇತ್ತೀಚೆಗೆ ಸುರತ್ಕಲ್ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಂಗಳಪೇಟೆಯ ಫಾಝಿಲ್ ಅವರ ಸಹೋದರ ಆದಿಲ್ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳ ಗಣೇಶಪುರ ಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ 8:30ರ ಸುಮಾರಿಗೆ ಮಂಗಳೂರು ಕಡೆಯಿಂದ ಮಂಗಳಪೇಟೆಯ ತನ್ನ ಮನೆಗೆ ಆದಿಲ್ ತನ್ನ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ, ಕಾಟಿಪಳ್ಳ ಗಣೇಶಪುರ ಪೇಟೆಯಲ್ಲಿ ಕಾರಿಗೆ ಸ್ಕೂಟರ್ ಢಿಕ್ಕಿ ಹೊಡೆಸಿದ್ದಾರೆ. ಬಳಿಕ ಕೆಲವರು ಸೇರಿ ಆದಿಲ್ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ ಎಂದು ಆದಿಲ್ ಆರೋಪಿಸಿದ್ದಾರೆ.
ಮಾಹಿತಿ ತಿಳಿದ ಪೊಲೀಸರು, ತಕ್ಷಣ ಸ್ಥಳಕ್ಕೆ ಆಗಮಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಆದಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಘಟನಾ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆಗೊಳಗಾದ ಆದಿಲ್ರಿಂದ ಮಾಹಿತಿ ಕಲೆ ಹಾಕಿದ್ದಾರೆ.ಈ ಬಗ್ಗೆ ಮಾತನಾಡಿರುವ ಕಮೀಷನರ್
ಕಾಟಿಪಳ್ಳ ಗಣೇಶಪುರ ಜಂಕ್ಷನ್ನಲ್ಲಿ ಇಂದು ರಾತ್ರಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ತಕ್ಷಣ ಸಾರ್ವಜನಿಕರು ಮತ್ತು ಪೊಲೀಸರು ಮಧ್ಯ ಪ್ರವೇಶಿಸಿ ಇತ್ತಂಡಗಳನ್ನು ಚದುರಿಸಿದ್ದಾರೆ. ಎರಡೂ ಕಡೆಯವರು ದೂರು ನೀಡಲು ಮುಂದಾಗಿದ್ದಾರೆ ಎಂದಿದ್ದಾರೆ.