ಸುಳ್ಯ: ಕಳಂಜದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಬಂಧಿಸಿರುವುದಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸುನೀಲ್, ಸುಧೀರ್, ಶಿವ, ರಂಜಿತ್ ಹಾಗೂ ಸದಾಶಿವ ಬಂಧಿತ ಆರೋಪಿಗಳು. ಘಟನೆಗೆ ಸಂಬಂಧಿಸಿ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಹಾಗೂ ಭಾಸ್ಕರ ಎಂಬವರ ವಿರುದ್ಧ ಕಲಂ: 143, 147, 323, 324, 307 ಜೊತೆಗೆ 149 IPC ಸೆಕ್ಷನ್ ನಡಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿ ಇಬ್ರಾಹೀಂ ಶಾನಿಫ್ ಎಂಬವರು ಪೊಲೀಸ್ ದೂರು ನೀಡಿದ್ದಾರೆ.
ಮೂಲತಃ ಕಾಸರಗೋಡಿನ ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್, ಸುಳ್ಯ ತಾಲೂಕು ಕಳಂಜ ಗ್ರಾಮದ ಕಳಂಜದಲ್ಲಿರುವ ಅಜ್ಜನ ಮನೆಯಲ್ಲಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದರು. ಜು.19ರಂದು ಸಂಜೆ ಕಳಂಜ ಗ್ರಾಮದ ವಿಷ್ಣು ನಗರ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕೆ ಮಸೂದ್ ಮತ್ತು ಸುಧೀರ್ ನಡುವೆ ಹೊಡೆದಾಟ ನಡೆದಿತ್ತೆನ್ನಲಾಗಿದೆ. ಬಳಿಕ ಮಾತುಕತೆಯಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸೋಣ ಎಂದು ಸ್ಥಳದಲ್ಲಿದ್ದ ಆರೋಪಿಗಳಾದ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಹಾಗೂ ಭಾಸ್ಕರ ಎಂಬವರು ಹೇಳಿದ್ದು, ಶಾನಿಫ್ ರಲ್ಲಿ ಮಸೂದ್ ರನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ. ಅದರಂತೆ ಶಾನಿಫ್ ರಾತ್ರಿ 11 ಗಂಟೆ ಸುಮಾರಿಗೆ ವಿಷ್ಣು ನಗರಕ್ಕೆ ಕರೆದುಕೊಂಡು ಬಂದಾಗ ಎಂಟು ಮಂದಿ ಆರೋಪಿಗಳ ತಂಡ ಮಸೂದ್ ಮೇಲೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಆರೋಪಿ ಅಭಿಲಾಷ್ ಅಲ್ಲಿ ಬಿದ್ದುಕೊಂಡಿದ್ದ ಬಾಟಲಿಯೊಂದರಿಂದ ಮಸೂದ್ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆನ್ನಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಓಡಿದ ಮಸೂದ್ ಬಳಿಕ ಸ್ಥಳೀಯರೊಬ್ಬರ ಮನೆಯ ಬಾವಿ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಶಾನಿಫ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಗಂಭೀರಾವಸ್ಥೆಯಲ್ಲಿದ್ದ ಮಸೂದ್ ಅವರನ್ನು ಕೂಡಲೇ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಗೆ ತೀವ್ರತರದ ಗಾಯಗೊಂಡಿರುವ ಅವರು ತೀವು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


