ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ ನಡೆಸಿರುವ ಘಟನೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಬ್ಬರ ಮೇಲೆ ಹಲ್ಲೆಗೆ ಯತ್ನ ನಡೆದಿದ್ದು, ಯುವತಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಪೂಜಾ ಹಿರೇಮಠ ಮತ್ತು ನಾರಾಯಣ್ ಮೇಲೆ ಹಲ್ಲೆ ಯತ್ನ ನಡೆದಿದ್ದು, ಪೊಲೀಸ್ ಸಿಬ್ಬಂದಿಗಳಾದ ಪೂಜಾ ಹಿರೇಮಠ ಹಾಗು ನಾರಾಯಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆ ನಡೆಸಲು ಮುಂದಾದ ನೋವೆಲ್ ಸಿಕ್ವೇರಾ, ಜಾನ್ ಸಿಕ್ವೇರಾ ಹಾಗು ಯುವತಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಪ್ರಕರಣವೊಂದರ ಮಾತುಕತೆಗೆ ಆಗಮಿಸಿದ್ದ ಆರೋಪಿಗಳು ಮಾತುಕತೆಯ ವೀಡಿಯೋ ಮಾಡಿಕೊಳ್ಳುತ್ತಿದ್ದರು. ನೋವೆಲ್ ಸೀಕ್ವೇರಾ ವೀಡಿಯೋ ಮಾಡಿಕೊಳ್ಳುತ್ತಿದ್ದ ವೇಳೆ ಪೊಲೀಸ್ ಸಿಬ್ಬಂದಿ ಪೂಜಾ ಮೊಬೈಲ್ ಪೋನ್ ಕಿತ್ತುಕೊಂಡಿದ್ದರು ಎನ್ನಲಾಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿ ಕಿತ್ತುಕೊಂಡ ಮೊಬೈಲ್ ವಾಪಾಸ್ ಕಿತ್ತುಕೊಳ್ಳಲು ಯತ್ನಿಸಿದಾಗ ಹಲ್ಲೆ ಯತ್ನ ನಡೆದಿದೆ.