ಮಂಗಳೂರು : ನಾಡಿನಾದ್ಯಂತ ಒಂದು ಕಡೆ ವರಮಹಾಲಕ್ಷ್ಮೀ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದರೆ ಮತ್ತೊಂದು ಕಡೆ ಕರಾವಳಿಯಾದ್ಯಂತ ತ್ಯಾಗ ಬಲಿದಾನದ ಸಂಕೇತವಾದ ಮುಸ್ಲೀಂರ ಪವಿತ್ರ ಹಬ್ಬ ಬಕ್ರೀದ್ ನ್ನು ಆಚರಣೆ ಮಾಡಲಾಗುತ್ತಿದೆ.
ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಸುರಕ್ಷಿತ ಅಂತರ ಕಾಪಾಡುವುದರೊಂದಿಗೆ ಮಸೀದಿಗಳಲ್ಲಿ ಸಾಮೂಹಿಕವಾಗಿ ಈದ್ ನಮಾಝ್ ನಿರ್ವಹಿಸಲಾಯಿತು.
ಜಿಲ್ಲೆಯ ಬಹುತೇಕ ಮಸೀದಿಗಳಲ್ಲಿ ಆಯಾ ಮಸೀದಿಯ ವ್ಯಾಪ್ತಿಯ ಮುಸ್ಲಿಮರು ನಮಾಝ್ ನಿರ್ವಹಿಸಿದರು. ಈದ್ಗಾದಲ್ಲಿ ಸಾಮೂಹಿಕ ನಮಾಝ್ ಮತ್ತು ಈದ್ ಖುತ್ಬಾಕ್ಕೆ ನಿರ್ಬಂಧ ವಿಧಿಸಲಾದ ಕಾರಣ ಇದೇ ಮೊದಲ ಬಾರಿಗೆ ಮಂಗಳೂರು ಸಹಿತ ಜಿಲ್ಲೆಯ ಯಾವುದೇ ಈದ್ಗಾಗಳಲ್ಲಿ ನಮಾಝ್, ಈದ್ ಖುತ್ಬಾ ನಡೆಯಲಿಲ್ಲ. ಬಹುತೇಕ ಮಸೀದಿಗಳಲ್ಲಿ ತಲಾ 50 ಮಂದಿಯಂತೆ ಸರದಿ ಸಾಲಿನಲ್ಲಿ ನಮಾಝ್ ನಿರ್ವಹಿಸಿದರು. 60 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 10 ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಮಸೀದಿಗೆ ಪ್ರವೇಶಿಸಲು ಅವಕಾಶ ಇರಲಿಲ್ಲ.
ಇನ್ನು ಇದೇ ಸಂದರ್ಭದಲ್ಲಿ ಮುಸ್ಲೀಂ ಬಾಂಧವರಿಗೆ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಯು ಟಿ ಖಾದರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಶುಭಾಶಯ ತಿಳಿಸಿದ್ದಾರೆ.