ಬಂಟ್ವಾಳ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.
ಬರಿಮಾರು ಗ್ರಾಮದ ಕೃಷಿಕ ಕುಟುಂಬದ ಮಹಿಳೆಯೋರ್ವರಿಗೆ ಜಮೀನು ವಿಚಾರಕ್ಕೆ ಸಂಬಂಧಿಸಿ ದಂತೆ ಫೋನ್ ಮುಖಾಂತರ ಕೊಲೆ ಬೆದರಿಕೆ ಒಡ್ಡಿದ ಆರೋಪಿ ವಲ್ಟಿ ಯಾನೆ ವಾಲ್ಟರ್ ಮಹಿಳೆಗೆ ಪೋನಿನಲ್ಲಿ ಅವ್ಯಾಚ್ಯ ಶಬ್ದಗಳಿಂದ ಬೈದು, ಅಶ್ಲೀಲವಾಗಿ ನಿಂದಿಸಿದ್ದು, ಈ ಬಗ್ಗೆ ಪೋಲೀಸ್ ಠಾಣೆಗೆ ಹಾಗೂ ದ.ಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು.ಆದರೆ ಆರೋಪಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬಳಿಕ ಮಹಿಳೆ ನ್ಯಾಯಾಲಯದ ಮುಂದೆ ಪಿರ್ಯಾದಿ ಸಲ್ಲಿಸಿದ್ದರು. ನ್ಯಾಯಾಲಯವು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ ಆದೇಶಿಸಿದೆ.
ಇದರಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿ ಬರಿಮಾರು ಗ್ರಾಮದ ಬಲ್ಯ ನಿವಾಸಿ ವಲ್ಟಿ ಯಾನೆ ವಾಲ್ಟರ್ ವಿರುದ್ಧ ಕಲಂ 504,506,507,509 ರಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.