ಬೆಂಗಳೂರು: ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 11 ಗಂಟೆಗೆ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ರಾಜಭವನದ ಬಳಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ, ಎಸಿಪಿ ಸೇರಿ 500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಇನ್ನು ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಮನೆ ಬಳಿ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.
ಬೊಮ್ಮಾಯಿ ಮನೆ ಬಳಿ ಕಾರ್ಯಕರ್ತರು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ಹಾಕಿ ಭದ್ರತೆ ಕಾಪಾಡಲಾಗಿದೆ. ಆರ್.ಟಿ.ನಗರದ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್ ಮಾಡಲಾಗಿದೆ. ನೂತನ ಸಿಎಂ ನಿವಾಸಕ್ಕೆ ಎನ್.ಮಹೇಶ್ ಸೇರಿದಂತೆ ಗಣ್ಯರು ಭೇಟಿ ನೀಡುತ್ತಿದ್ದಾರೆ.
50 ಅಧಿಕಾರಿಗಳ ನೇತೃತ್ವದಲ್ಲಿ 500 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ರಾಜಭವನದ ಒಳಗೆ ಹಾಗೂ ಹೊರಗೆ ಅಗತ್ಯ ಭದ್ರತೆ ಕಲ್ಪಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ರಾಜಭವನದ ಒಳಗೆ ಪ್ರವೇಶ. ರಾಜಭವನದ ಹೊರಗೆ ಪ್ರತಿಭಟನೆಗೆ ಅವಕಾಶ ಇಲ್ಲ. ಮುನ್ನೆಚ್ಚರಿಕೆಯಾಗಿ ಪ್ರತಿಭಟನೆ ಬಗ್ಗೆ ನಿಗಾ ವಹಿಸಿದ್ದೇವೆ. ಅಹಿತಕರ ಘಟನೆ ನಡೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಹೇಳಿಕೆ ನೀಡಿದ್ದಾರೆ.
ಇನ್ನು ಪ್ರಮಾಣವಚನಕ್ಕೂ ಮುನ್ನ ನೂತನ ಸಿಎಂ ಬೆಳ್ಳಂಬೆಳಗ್ಗೆ ಟೆಂಪಲ್ ರನ್ ನಡೆಸಿದ್ದಾರೆ.