ಉಕ್ರೇನ್ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿದ್ದ ಹಾವೇರಿಯ ವಿದ್ಯಾರ್ಥಿ ನವೀನ್ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಇದೇ ವೇಳೆ 25 ಲಕ್ಷ ರೂ.ಗಳ ಪರಿಹಾರ ಚೆಕ್ ಹಸ್ತಾಂತರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಬಾಂಬಿಂಗ್ ನಿಂದಾಗಿ ನವೀನ್ ಉಕ್ರೇನ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ನವೀನ್ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲಿ ನಿರಂತರವಾಗಿ ದಾಳಿ ಆಗುತ್ತಿರುವ ಕಾರಣ ಮೃತದೇಹ ತರಲು ವಿಳಂಬವಾಗುತ್ತಿದೆ. ಇಂದು ಕದನ ವಿರಾಮ ಘೋಷಣೆಯಾಗಿರುವುದರಿಂದ ಆದಷ್ಟು ಬೇಗ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಕೆಲವರು ತಾಯ್ನಾಡಿಗೆ ಆಗಮಿಸಿದ್ದಾರೆ. ಇನ್ನುಳಿದವರನ್ನು ಕರೆ ತರುವ ಪ್ರಯತ್ನ ಆಗುತ್ತಿದೆ. ಹಾವೇರಿ ಜಿಲ್ಲೆಯ ಹತ್ತು ಮಂದಿ ವಿದ್ಯಾರ್ಥಿಗಳ ಪೈಕಿ ಐವರು ತವರು ಜಿಲ್ಲೆಗೆ ಆಗಮಿಸಿದ್ದಾರೆ. ಉಳಿದವರನ್ನು ಕರೆ ತರುವ ಪ್ರಯತ್ನ ಆಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.