
ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಆನಂದ್.ಎಂ ನೇತೃತ್ವದ ತಂಡ ಆ.4 ರಂದು ಮಧ್ಯಾಹ್ನ 2 ಗಂಟೆಗೆ ದಾಳಿ ಮಾಡಿದ್ದಾರೆ.ಪೊಲೀಸ್ ದಾಳಿ ವೇಳೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಚಂದ್ರಕಾಂತ, ಕುಕ್ಕಾವು ನಿವಾಸಿ ಶೇಖರ, ಕೊಲ್ಲಿ ನಿವಾಸಿ ನಾರಾಯಣ ಎಂಬವರನ್ನು ಬಂಧಿಸಿದ್ದು ಉಳಿದ ಆರೋಪಿಗಳು ಪೊಲೀಸರನ್ನು ನೋಡಿ ಪರಾರಿಯಾಗಿದ್ದು ಅವರಿಗಾಗಿ ಬಲೆ ಬಿಸಲಾಗಿದೆ. ದಾಳಿ ವೇಳೆ ಒಂದು ಕೋಳಿ, ಒಂದು ಬಾಳು(ಸಣ್ಣಕತ್ತಿ), 1910 ರೂಪಾಯಿ ಹಣ,ಎರಡು ಮೋಟರ್ ಬೈಕ್, ಒಂದು ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳು ಮತ್ತು ಇತರ ಪರಾರಿಯಾದವರ ವಿರುದ್ಧ ಬಿಎನ್ಎಸ್ ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11(1) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.


