ಬೆಳ್ತಂಗಡಿ: ವ್ಯಕ್ತಿಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದು ವಾಹನದಿಂದ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿವಾಸಿ ಬಾಲಕೃಷ್ಣ (43) ಅವರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಆರೋಪಿ ಧರ್ಮಸ್ಥಳದ ಕಂಚಿಮಾರು ನಿವಾಸಿ ಶರತ್(32) ಅವರ ಪತ್ನಿ ಕೂಡ ಇದೇ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಆರೋಪಿ ಶರತ್ ತನ್ನ ಪತ್ನಿಯೊಂದಿಗೆ ಬಾಲಕೃಷ್ಣ ಅವರಿಗೆ ಅನೈತಿಕ ಸಂಬಂಧವಿದೆ ಎಂದು ಅನುಮಾನಿಸಿಕೊಂಡು ಸುಮಾರು ಆರು ತಿಂಗಳಿಂದ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ ನಾಲ್ಕು ತಿಂಗಳ ಹಿಂದೆ ಬಾಲಕೃಷ್ಣ ಅವರಿಗೆ ವಾಹನದಡಿ ಹಾಕಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ.
ಜುಲೈ 30ರಂದು ಸಂಜೆ 5.45ರ ಸುಮಾರಿಗೆ ಬಾಲಕೃಷ್ಣ ಅವರು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ, ಆರೋಪಿ KA-05-AD-6341 ನಂಬರಿನ ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕುರುಮಾನಿ ಕ್ರಾಸ್ ಸಮೀಪ ಅವರ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ ಪರಿಣಾಮ ಬಾಲಕೃಷ್ಣ ಅವರು ವಾಹನ ಸಮೇತ ಕಚ್ಚಾ ರಸ್ತೆಗೆ ಬಿದ್ದು, ತಲೆ ಹಾಗೂ ಕಾಲಿಗೆ ರಕ್ತಗಾಯಗಳಾಗಿದ್ದು, ಬೆನ್ನು, ಕುತ್ತಿಗೆ ಮತ್ತು ಎದೆ ಭಾಗದಲ್ಲೂ ಗಾಯವಾಗಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಬಾಲಕೃಷ್ಣ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 109 ಬಿಎನ್ಎಸ್–2023 ಅಡಿಯಲ್ಲಿ ಪ್ರಕರಣ ದಾಖಲಾಸಿ ತನಿಖೆ ನಡೆಸಿ ಆರೋಪಿ ಧರ್ಮಸ್ಥಳ ಗ್ರಾಮದ ಕಂಚಿಮಾರು ನಿವಾಸಿ ಶರತ್(32) ಎಂಬಾತನನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಪಾರ್ಕಿಂಗ್ ಬಳಿ ಆ.22 ರಂದು ಬೆಳಗ್ಗೆ 8 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ್ ನೇತೃತ್ವದ ತಂಡ ಬಂಧಿಸಿ ಬಳಿಕ ಸಂಜೆ 5 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.


