ಬೆಳ್ತಂಗಡಿ: ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ನಾಯ್ಕ್, ತನ್ನ ಇಲಾಖೆಗೆ ಸಲ್ಲಿಸಿದ ಅನುಪಮ ಸೇವೆಗಾಗಿ ಪ್ರಸಕ್ತ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ರೀತಿಯಲ್ಲಿ ಪ್ರಕರಣದ ತನಿಖಾ ಸಹಾಯಕರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪದಕ ನೀಡಲಾಗುತ್ತಿದೆ. ಇವರು ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕಳೆದ 6 ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಉಜಿರೆಯ ಎಸ್ಆರ್ ಬಾರ್ ಬಳಿ ಕೊಲೆ ಪ್ರಕರಣ, ಕೊಯ್ಯೂರು, ವೇಣೂರು, ಲಾಯಿಲದಲ್ಲಿ ನಡೆದಿದ್ದ ಪೋಕ್ಸೊ ಪ್ರಕರಣ, ಮರೋಡಿ ಲೈಂಗಿಕ ದೌರ್ಜನ್ಯ ಪ್ರಕರಣ, ವಿಟ್ಲದಲ್ಲಿ ನಡೆದಿದ್ದ ಕೊಲೆ ಪ್ರಕರಣ, ಉಜಿರೆ ಅಪಘಾತದಲ್ಲಿ ಶಿಕ್ಷಕಿ ಸಾವು ಪ್ರಕರಣ ಮೊದಲಾದ ಗಂಭೀರ ಅಪರಾಧ ಪ್ರಕರಣಗಳಲ್ಲಿ ತನಿಖಾ ಸಹಾಯಕರಾಗಿ ಆರೋಪಿಗಳಿಗೆ ನ್ಯಾಯಾಲಯದಿಂದ ಶಿಕ್ಷೆಯಾಗುವಂತೆ ಕರ್ತವ್ಯ ಸಲ್ಲಿಸಿದ್ದನ್ನು ಪರಿಗಣಿಸಿ ಅವರನ್ನು ಈ ಪದಕಕ್ಕೆ ಆಯ್ಕೆ ಮಾಡಲಾಗಿದೆ.