ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಮೂರು ಎಸ್ ಡಿಪಿಐ ಕಚೇರಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ.
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್ಡಿಪಿಐ ಕೈವಾಡ ಇರುವ ಬಗ್ಗೆ ಆರೋಪಗಳು ಕೇಳಿದ್ದವು. ಈ ಹಿನ್ನೆಲೆಯಲ್ಲಿ ಸರ್ಚ್ ವಾರೆಂಟ್ ಪಡೆದ ಸಿಸಿಬಿ ತಂಡ ಹಲಸೂರು ಗೇಟ್ ಸಮೀಪದ ಎಸ್ಡಿಪಿಐ ಕೇಂದ್ರ ಕಚೇರಿ, ಡಿಜೆಹಳ್ಳಿ, ಕೆಜೆಹಳ್ಳಿ ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಅಲ್ಲಿದ್ದ ಕಂಪ್ಯೂಟರ್ ಮತ್ತು ಇತರೆ ವಸ್ತುಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಸಿಸಿಬಿಯ ಒಸಿಡಬ್ಲ್ಯು ವಿಂಗ್ನ ಎಸಿಪಿ ಜಗನ್ನಾಥ ರೈ ನೇತೃತ್ವದ ತಂಡ ನ್ಯಾಯಾಲಯದ ಸರ್ಚ್ ವಾರಂಟ್ ಪಡೆದುಕೊಂಡು ಮೂರು ವಿಶೇಷ ತಂಡಗಳು ಈ ದಾಳಿಯನ್ನು ನಡೆಸಿವೆ. ದಾಳಿ ನಡೆಸಿದ ಸಂದರ್ಭದಲ್ಲಿ ಕಚೇರಿಗಳಲ್ಲಿ ಎಸ್ ಡಿಪಿಐ ಸಿಬ್ಬಂದಿ ಹಾಜರಿದ್ದರು.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಭಾಗಿಯಾದ ಆರೋಪದಲ್ಲಿ ಎಸ್ಡಿಪಿಐ ಕಾರ್ಯದರ್ಶಿ ಸೇರಿದಂತೆ 32 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.