ಮಂಗಳೂರು: ಮೋರ್ಗನ್ಸ್ ಗೇಟ್ ಬಳಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಡೆತ್ ನೋಟ್ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆಗೆ ಕೌಟುಂಬಿಕ ಕಲಹ ಹಾಗೂ ಮತಾಂತರವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು, ನಾಗೇಶ್ ಬರೆದಿದ್ದೆನ್ನಲಾದ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ನೂರ್ ಜಹಾನ್ ಎಂಬ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.
ಹೀಗಾಗಿ ಕಳೆದ ಎರಡು ತಿಂಗಳ ಹಿಂದೆ ಪತ್ನಿ ಮನೆ ಬಿಟ್ಟು ಹೋಗಿದ್ದು ಬಳಿಕ ಆಕೆಯನ್ನು ಪತ್ತೆ ಹಚ್ಚಿ ಪೊಲೀಸ್ ಠಾಣೆಯಲ್ಲಿ ದಂಪತಿಗಳಿಗಿಬ್ಬರಿಗೂ ಬುದ್ದಿ ಹೇಳಿ ಸರಿಪಡಿಸಲಾಗಿತ್ತು.
ತನ್ನ ಪತ್ನಿ ವಿಜಯಲಕ್ಷ್ಮೀಯು ನೂರ್ ಜಹಾನ್ ಎಂಬ ಮಹಿಳೆ ಜೊತೆ ಜಾಸ್ತಿ ಸಂಪರ್ಕದಲ್ಲಿದ್ದಳು, ಅಲ್ಲದೆ ಮತಾಂತರ ಪ್ರಯತ್ನ ನಡೆದಿತ್ತು ಎಂದು ನಾಗೇಶ್ ಬರೆದಿಟ್ಟಿರುವ ಡೆತ್ ನೋಟಿನಲ್ಲಿ ಉಲ್ಲೇಖಿಸಿದ್ದಾನೆ. ಆದರೆ ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ ವಿಜಯಲಕ್ಷ್ಮೀ ನೂರ್ ಜಹಾನ್ ಮನೆಗೆ ಕೆಲಸಕ್ಕೆ ಹೋಗುತ್ತಿದ್ದಳು. ಇದು ನಾಗೇಶ್ ಗೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಎಲ್ಲೂ ಕೆಲಸಕ್ಕೆ ಹೋಗಬೇಡ, ಮನೆಯಲ್ಲೇ ಬಿದ್ದಿರು ಅಂತ ಆತ ಪತ್ನಿಗೆ ಹೊಡೆಯುತ್ತಿದ್ದ ಎಂದು ತಿಳಿದುಬಂದಿದೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದವರು ಹೇಳಿದ್ದಾರೆ.