ಮಂಗಳೂರು: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆಯ ಮಸೂದ್ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಎದುರುಗಡೆಯ ಉಸ್ಮಾನಿಯಾ ಕಾಂಪ್ಲೆಕ್ಸ್ ಬಳಿ ನಡೆದಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅತಿ ವೇಗದಲ್ಲಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಸವಾರರಿಬ್ಬರು ಬೈಕಿನಿಂದ ಡಿವೈಡರ್ ಗೆ ಎಸೆಲಯಲ್ಪಟ್ಟಿರುವುದು ಕಂಡುಬರುತ್ತಿದೆ.
ಗಾಯಾಳುಗಳನ್ನು ಗಣೇಶ್ ಮತ್ತು ಧೀರಜ್ ಎಂದು ಗುರುತಿಸಲಾಗಿದೆ.ಗಣೇಶ್ ಶನಿವಾರ ರಾತ್ರಿ ತನ್ನ ಸ್ನೇಹಿತ ಧೀರಜ್ ರನ್ನು ಅವರ ಮನೆಗೆ ಬಿಟ್ಟು ಬರಲೆಂದು ತನ್ನ ಬೈಕಿನಲ್ಲಿ ಕರೆದೊಯ್ಯುತ್ತಿದ್ದವೇಳೆ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಈ ಅಪಘಾತ ನಡೆದಿದೆ.
ಗಂಭೀರವಾಗಿ ಗಾಯಗೊಂಡು ಡಿವೈಡರ್ನಲ್ಲಿ ಬಿದ್ದಿದ್ದ ಇವರಿಬ್ಬರನ್ನು ಆ ದಾರಿಯಲ್ಲಿ ಆಟೋರಿಕಾ ಬಾಡಿಗೆಗೆ ತೆರಳುತ್ತಿದ್ದ ಪ್ರವೀಣ್ ಕುಮಾರ್ ಎಂಬುವವರು ಗಮನಿಸಿ ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಂಭೀರಾವಸ್ಥೆಯಲ್ಲಿರುವ ಗಣೇಶ್ ಮತ್ತು ಧೀರಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.