ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಹಲವು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಬಹುದೆಂದು ಹೇಳಲಾಗಿತ್ತು. ಅದಕ್ಕೆ ಪೂರಕವಾದ ಮಹತ್ವದ ಘೋಷಣೆ ಹೊರಬಿದ್ದಿದೆ.
ಮುಂಬರುವ ತಮಿಳುನಾಡು ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಎಐಎಡಿಎಂಕೆ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ. ತಮಿಳುನಾಡು ಉಪಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪಕ್ಷದ ನಾಯಕ ಒ.ಪನ್ನೀರ್ ಸೆಲ್ವಂ ಈ ಕುರಿತಾಗಿ ಘೋಷಣೆ ಮಾಡಿದ್ದಾರೆ.
‘ಲೋಕಸಭೆ ಚುನಾವಣೆಯ ವೇಳೆ ಮಾಡಿಕೊಳ್ಳಲಾದ ಮೈತ್ರಿಯು ವಿಧಾನಸಭೆ ಚುನಾವಣೆಯಲ್ಲಿ ಮುಂದುವರಿಯಲಿದೆ. ನಾವು ಹತ್ತು ವರ್ಷಗಳ ಉತ್ತಮ ಆಡಳಿತ ನೀಡಿದ್ದೇವೆ. ನಮ್ಮ ಮೈತ್ರಿಕೂಟವು 2021ರ ವಿಧಾನಸಭೆ ಚುನಾವಣೆಯನ್ನೂ ಗೆಲ್ಲಲಿದೆ. ತಮಿಳುನಾಡು ಎಂದಿಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತದೆ’ ಎಂದು ಪಳನಿಸ್ವಾಮಿ ಹೇಳಿದ್ದಾರೆ.
ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡಿರುವ ವೇಳೆಯಲ್ಲಿ ಪನ್ನೀರ್ ಸೆಲ್ವಂ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಯುವ ಬಗ್ಗೆ ಘೋಷಣೆ ಮಾಡಿದ್ದು, ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
9 ವರ್ಷಕ್ಕೂ ಹೆಚ್ಚು ಸಮಯದಿಂದ ಸುದೀರ್ಘ ಆಡಳಿತ ನಡೆಸುತ್ತಿರುವ ಎಐಎಡಿಎಂಕೆ, ರಾಜ್ಯದಲ್ಲಿ ಮತ್ತೊಮ್ಮೆ ಡಿಎಂಕೆಯನ್ನು ಮಣಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಸೀಟುಗಳ ಹಂಚಿಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.