ಬೆಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಒಂದು ವರ್ಷದ ಜನೋತ್ಸವ ಸಾಧನಾ ಸಮಾವೇಶ ರದ್ದುಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರದಲ್ಲಿ ಬೃಹತ್ ಸಾಧನಾ ಸಮಾವೇಶ ನಿಗದಿಯಾಗಿತ್ತು. ಸಮಾವೇಶಕ್ಕಾಗಿ ಎಲ್ಲಾ ಸಿದ್ಧತೆಗಳೂ ಪೂರ್ಣಗೊಂಡಿತ್ತು.
ಅಲ್ಲದೇ ವಿಧಾನಸೌಧದ ಬ್ಯಾಂಕ್ ವೆಟ್ ಹಾಲ್ ನಲ್ಲಿ ನಿಗದಿಯಾಗಿದ್ದ ಸರ್ಕಾರದ ಕಾರ್ಯಕಮವನ್ನೂ ರದ್ದುಗೊಳಿಸಲಾಗಿದೆ.
ನಿನ್ನೆ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಮಂಗಳೂರಿನಿಂದ ಬೆಂಗಳೂರಿಗೆ ದೌಡಾಯಿಸಿ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಿದ ಬಳಿಕ ಮಧ್ಹರಾತ್ರಿ ನಡೆಸಿದ ತುರ್ತು ಸುದ್ದಿಗೋಷ್ಟಿಯಲ್ಲಿ ಸಿಎಂ ಜನೋತ್ಸವ ರದ್ದು ಬಗ್ಗೆ ಘೋಷಣೆ ಮಾಡಿದ್ದಾರೆ.
ಪ್ರವೀಣ್ ಕುಟುಂಬದ ಆಕ್ರಂದನ ನೋಡಿ ಜನೋತ್ಸವ ರದ್ದುಪಡಿಸುವ ತೀರ್ಮಾನ ಮಾಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಜನೋತ್ಸವ ರದ್ದು ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ರಾಜ್ಯ ಭೇಟಿಯೂ ರದ್ದುಗೊಂಡಿದೆ.


