ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿಯಿಂದ ಉಚ್ಛಾಟನೆಗೊಂಡಿರವ ನೂಪುರ್ ಶರ್ಮಾ, ತಮಗೆ ಜೀವ ಬೆದರಿಕೆ ಇದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ನೂಪುರ್ ಶರ್ಮಾ, ಸೂಕ್ತ ಭದ್ರತೆ ಕಲ್ಪಿಸುವಂತೆ ದೆಹಲಿ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ನೂಪುರ್ ಶರ್ಮಾ ನೀಡಿರುವ ದೂರನ್ನು ಸ್ವೀಕರಿಸಿರುವ ದೆಹಲಿ ಪೊಲೀಸರು, ಈ ಕುರಿತು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ನೂಪುರ್ ಶರ್ಮಾ ಹಾಗೂ ನವೀನ್ ಕುಮಾರ್ ಜಿಂದಾಲ್ ವಿರುದ್ಧ ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಬಿಜೆಪಿ ಈ ಇಬ್ಬರೂ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದ್ದು, ಈ ನಾಯಕರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಇಬ್ಬರೂ ನಾಯಕರು ತಮ್ಮ ಹೇಳಿಕೆಗೆ ಕ್ಷಮಾಪಣೆ ಕೋರಿದ್ದು, ಅನ್ಯ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಆದರೆ ಇದೀಗ ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗಿದ್ದು, ಈ ಕುರಿತು ಖುದ್ದು ನೂಪುರ್ ಶರ್ಮಾ ದೆಹಲಿ ಪೊಲೀಸರಿಗೆ ದೂರು ನೀಡಿದ್ಧಾರೆ.ನಾನು ನನ್ನ ಹೇಳಿಕೆ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ನೀಡಿದ್ದೇನೆ. ಆದರೆ ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ನನ್ನ ಕುಟುಂಬದ ಸುರಕ್ಷತೆ ಬಗ್ಗೆ ಕಾಳಜಿಯಾಗಿದೆ ಎಂದು ನೂಪುರ್ ಶರ್ಮಾ ಆತಂಕ ಹೊರಹಾಕಿದ್ದಾರೆ.