ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ವಮಾನಿಸಿದೆ ಎಂದು ಆರೋಪಿಸಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಮುರ್ಮು ಅವರನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಅವರು ‘ರಾಷ್ಟ್ರಪತ್ನಿ” ಎಂದು ಸಂಬೋಧಿಸುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ಇರಾನಿ ಆರೋಪಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸಂಸತ್ ಆವರಣದಲ್ಲಿ ಮತ್ತೊಂದು ಪ್ರತಿಭಟನೆ ನಡೆದಿದೆ. ಫಲಕಗಳನ್ನು ಹಿಡಿದ ಬಿಜೆಪಿ ಸಂಸದರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೌಧುರಿ ಅವರ ಹೇಳಿಕೆ ‘ಸೆಕ್ಸಿಸ್ಟ್ ಅವಮಾನ’ ಎಂದು ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ದಾರೆ.
ತಾವು ಬಾಯ್ತಪ್ಪಿ ಆ ರೀತಿ ಹೇಳಿರುವುದಾಗಿ ತಿಳಿಸಿರುವ ಅಧೀರ್ ರಂಜನ್ ಚೌಧುರಿ ಅವರು ಕ್ಷಮೆ ಯಾಚಿಸಿದ್ದಾರೆ. ಬಿಜೆಪಿಯವರು ಚಿಕ್ಕ ಸಂಗತಿಯನ್ನು ದೊಡ್ಡ ಬೆಟ್ಟದಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಚೌಧುರಿ ಅವರು ಈಗಾಗಲೇ ತಮ್ಮ ಹೇಳಿಕೆಗೆ ಕ್ಷಮೆ ಕೋರಿದ್ದಾರೆ ಎಂದು ಹೇಳಿದ್ದಾರೆ.